ADVERTISEMENT

ರಸ್ತೆ ನಿರ್ವಹಣೆ ಮಾಡದೆ ಅಪಘಾತ ಸಂಭವಿಸಿದ್ದಲ್ಲಿ ಅಧಿಕಾರಿಗಳೇ ಹೊಣೆ:ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 5:58 IST
Last Updated 29 ಜುಲೈ 2025, 5:58 IST
<div class="paragraphs"><p>ಮಡಿಕೇರಿಯಲ್ಲಿ ಸೋಮವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚನೆ ನೀಡಿದರು</p></div>

ಮಡಿಕೇರಿಯಲ್ಲಿ ಸೋಮವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚನೆ ನೀಡಿದರು

   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈಚೆಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬೆನ್ನಲ್ಲೆ ಸೋಮವಾರ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ ನಡೆಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ಇಲಾಖೆ ವ್ಯಾಪ್ತಿಯ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಅಪಘಾತಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ADVERTISEMENT

ರಸ್ತೆ ಸುರಕ್ಷತೆ ಬಗ್ಗೆ ಎಂಜಿನಿಯರ್‌ಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ವಾರದಲ್ಲಿ ತಾಲ್ಲೂಕುವಾರು ಮಾಹಿತಿ ನೀಡುವಂತೆಯೂ ಅವರು ನಿರ್ದೇಶನ ನೀಡಿದರು.

ಮುಂದಿನ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಆಗಸ್ಟ್ 21ಕ್ಕೆ ನಿಗದಿಗೊಳಿಸಿದ ಅವರು, ಅಪಘಾತ ತಡೆಯಲು ಸಾಧ್ಯವಿರುವ ಎಲ್ಲ ಬಗೆಯ ಕ್ರಮಗಳ‌ನ್ನೂ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮುಖ್ಯವಾಗಿ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದ ಅವರು ಈ ಕುರಿತು ಹಲವು ಸಲಹೆಗಳನ್ನು ನೀಡಿದರು.

ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ರಸ್ತೆಉಬ್ಬು (ಹಂಪ್‍)ಗಳನ್ನು ಅಳವಡಿಸಬೇಕು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯಬೇಕು. ರಸ್ತೆ ಬದಿ ಗಿಡಗಂಟಿಗಳನ್ನು ಕಡಿಯಬೇಕು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‌ಗಳಿಗೆ ತಾಕೀತು ಮಾಡಿದರು.

ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದು. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆಯೂ ಅವರು ಸೂಚಿಸಿದರು.

ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ‘ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಎಲ್ಲೆಲ್ಲಿ ಹಂಪ್‍ಗಳನ್ನು ಅಳವಡಿಸಬೇಕು. ಬಿಳಿ ಬಣ್ಣ ಬಳಿಯಬೇಕು ಎಂಬ ಬಗ್ಗೆ, ಹೆಚ್ಚಿನ ಅಫಘಾತ ಸಂಭವಿಸುವ ಸ್ಥಳದ ಬಗ್ಗೆ ಎರಡು ಮೂರು ದಿನದಲ್ಲಿ ಪಟ್ಟಿ ನೀಡಲಾಗುವುದು’ ಎಂದು ತಿಳಿಸಿದರು.

‘ಅಪಘಾತದಿಂದ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿದ್ದು, ಅಪಘಾತ ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ಪ್ರತಿಯೊಬ್ಬರ ಜೀವವು ಅಮೂಲ್ಯವಾಗಿದ್ದು, ಈ ಬಗ್ಗೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಪೊಲೀಸ್, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಹೀಗೆ ವಿವಿಧ ಇಲಾಖೆಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ’ ಎಂದರು.

ಅರ್ಧ ಕಿಲೋಮೀಟರ್ ಒಳಗೆ ಪದೇ ಪದೇ ಅಪಘಾತ ಸಂಭವಿಸಿದ್ದಲ್ಲಿ ‘ಬ್ಲಾಕ್ ಸ್ಪಾಟ್’ ಎಂದು ಗುರುತಿಸಲಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಜಿ.ಎಸ್.ಗಿರೀಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್ ಅವರು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪೌರಾಯುಕ್ತ ಎಚ್.ಆರ್.ರಮೇಶ್, ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕದ ಸಹಾಯಕ ಸಂಚಾರ ಅಧೀಕ್ಷಕ ಎ.ಈರಸಪ್ಪ ಭಾಗವಹಿಸಿದ್ದರು.

ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು

ಜಿಲ್ಲಾಧಿಕಾರಿ ನೀಡಿದ ಇತರ ಸೂಚನೆಗಳು

* ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

* ಕೊಯನಾಡು ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಪದೇ ಪದೇ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿವೆ. ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು

* ವಿರಾಜಪೇಟೆ-ಗೋಣಿಕೊಪ್ಪ ಮಾರ್ಗದ ಆತೂರು ಜಂಕ್ಷನ್ ಬಳಿ ಸೂಚನಾ ಫಲಕ ಅಳವಡಿಸಬೇಕು

* ರಸ್ತೆ ಹಂಪ್‍ಗಳನ್ನು ಅಳವಡಿಸಬೇಕು. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗಲಿವೆ. ಈ ಸಂಬಂಧ ಗಮನಹರಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.