
ಕುಶಾಲನಗರ ಸಮೀಪದ ಕೂಡಿಗೆ ಡಯಟ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟವನ್ನು ಡಯಟ್ ಪ್ರಾಂಶುಪಾಲ ಉದಯಕುಮಾರ್ ಉದ್ಘಾಟಿಸಿದರು.
ಕುಶಾಲನಗರ: ‘ಎಲ್ಲರಿಗೂ ಕ್ರೀಡೆ ಅವಕಾಶಗಳು ಲಭ್ಯವಾಗಬೇಕು’ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲ ಉದಯಕುಮಾರ್ ಹೇಳಿದರು.
ಕೂಡಿಗೆ ಡಯಟ್ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಸೋಮವಾರಪೇಟೆ, ಕುಶಾಲನಗರ ತಾಲ್ಲೂಕು ಹಾಗೂ ಕೊಡಗು ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಹೊಂದಿರಬೇಕು. ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳು ಸ್ಫೂರ್ತಿದಾಯಕವಾಗಿರಲಿ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮಾತನಾಡಿ, ‘ಅರ್ಹ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಸರ್ಕಾರ ವಯೋಮಿತಿ ನಿಗದಿ ಮಾಡಿದೆ. ಇದರಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಅನುಕೂಲವಾಗಿದೆ. ಜೊತೆಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಉನ್ನತ ಮಟ್ಟಕ್ಕೆ ಏರಬಹುದು’ ಎಂದರು.
ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೈಗೂಡಿಸಿಕೊಳ್ಳಲು ಪ್ರೇರಣೆ ನೀಡುವುದರ ಜೊತೆಗೆ ಕೀಳರಿಮೆ ದೂರ ಮಾಡುತ್ತದೆ’ ಎಂದರು.
ಶಿಕ್ಷಣ, ಕ್ರೀಡಾ ವಿಷಯದಲ್ಲಿ ಬದಲಾಗುವ ನೀತಿ ನಿಯಮಗಳಿಂದ ಕೆಲವು ಸಮಸ್ಯೆಗಳು ಉಂಟಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳು ಮುಚ್ಚುತ್ತಿವೆ. ಆದ್ದರಿಂದ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕೀರ್ತಿ ತರಬೇಕು ಎಂದರು.
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿದರು.
ಈ ವೇಳೆ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರಾಂಗಿ ನಾಗರಾಜು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎನ್.ಮಂಜುನಾಥ್, ಎಸ್.ಎ.ಯೋಗೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜು, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನ ಕುಮಾರ್, ಜಿಲ್ಲಾ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಅನುದಾನ ರಹಿತ ಶಾಲಾ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ದಾಮೋದರ್, ತಾಲ್ಲೂಕು ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದಿನೇಶ್, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಸಹಾಯಕ ನಿರ್ದೇಶಕ ಜಿ.ಎಂ.ಹೇಮಂತ್, ಸಿಆರ್ಪಿ ಶಾಂತಕುಮಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ ನಡೆಸಿದಕೊಟ್ಟರು. ಕುಮಾರಿ ರಕ್ಷಿತಾ ಪ್ರಾರ್ಥಿಸಿದರು.
ಇದಕ್ಕೂ ಮುನ್ನ ವಿವಿಧ ಶಾಲೆಗಳ ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.