ಕುಶಾಲನಗರ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದ ಹಾಗೂ ರಾಷ್ಟ್ರೀಯ ಭಾವೈಕ್ಯ ಬೆಳೆಸಲು ಸಹಕಾರಿಯಾಗಿವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯು ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಮಕ್ಕಳು ಹಾಗೂ ಸಮುದಾಯಕ್ಕೆ ಉತ್ತಮ ಸಂದೇಶ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಕ್ಕಳಲ್ಲಿ
ಉತ್ತಮ ಮೌಲ್ಯಗಳನ್ನು ಕಲಿಸಲಾಗುತ್ತಿದೆ. ಸಂಸ್ಥೆಯ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಸದಾ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.
ಸ್ಕೌಟ್, ಗೈಡ್ಸ್ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ವತಿಯಿಂದ ಕಳೆದ ಒಂದು ವರ್ಷದಲ್ಲಿ ಕೈಗೊಂಡ ವಿವಿಧ ಕಾರ್ಯಕ್ರಮಗಳು, ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ವಾರ್ಷಿಕ ಲೆಕ್ಕಪತ್ರವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಮಂಡಿಸಿದರು. ವಾರ್ಷಿಕ ವರದಿಯನ್ನು ಸಂಸ್ಥೆಯ ಕೋಶಾಧಿಕಾರಿ ನರೇಶ್ ಮಂಡಿಸಿದರು. ಲೆಕ್ಕಪತ್ರ ಹಾಗೂ ವಾರ್ಷಿಕ ವರದಿಯನ್ನು ಸಭೆಯು ಒಮ್ಮತದಿಂದ ಅಂಗೀಕರಿಸಿತು.
ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಸ್.ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಕೆ.ಪಿ.ರಾಜು, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಇಂದಿರಾ ಮುತ್ತಣ್ಣ, ಕೋಶಾಧಿಕಾರಿ ಎನ್.ಎಸ್.ನರೇಶ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸ್ಕೌಟ್ಸ್ ಕಮಿಷನರ್ ತರಬೇತುದಾರ ಬಿ.ಕೆ. ಗಣೇಶ್, ಸ್ಕೌಟ್ಸ್ ಮಾಸ್ಟರ್ ಡಿ.ವಿ.ಗಣೇಶ್, ಕೊಡಗು ವಿಶ್ವವಿದ್ಯಾಲಯದ ಪ್ರೊ.ಮಂಜುಳ, ಸ್ಕೌಟ್ಸ್, ಗೈಟ್ಸ್ನ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.