ಸಿದ್ದಾಪುರ: ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಭಾನುವಾರ ಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ಧರೆಗುರುಳಿದೆ.
ಸಿದ್ದಾಪುರ ಗುಹ್ಯ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದವು. ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಸ್ಥಳೀಯರು ಕಂಬ ಹಾಗೂ ಮರವನ್ನು ತೆರವುಗೊಳಿಸಿದರು.
ಸಿದ್ದಾಪುರ-ಅರೆಕಾಡು ರಸ್ತೆಯಲ್ಲಿ ಬೃಹತ್ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳೀಯರು ಮರವನ್ನು ತೆರವುಗೊಳಿಸಿದರು. ಪಾಲಿಬೆಟ್ಟ ರಸ್ತೆ, ಕರಡಿಗೋಡು , ವಿವಿಧ ಭಾಗದಲ್ಲಿ ಗಾಳಿಗೆ ಮರಗಳು ಬಿದ್ದಿದೆ. ಭಾರಿ ಮಳೆಯಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.
ಭಾರಿ ಗಾಳಿ ಮಳೆಗೆ ಕಾರ್ಮಾಡು ಗ್ರಾಮದ ನಿವಾಸಿ ಸಾರಮ್ಮ ಎಂಬವರ ಮನೆಗೆ ಮರವೊಂದು ಬಿದ್ದಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.