ಸೋಮವಾರಪೇಟೆ: ‘ಅಭಿವೃದ್ಧಿಯಿಂದ ವಂಚಿತವಾಗಿರುವ ಪಟ್ಟಣವನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲು ಸಾಧ್ಯ’ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.
ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಶನಿವಾರ ಅಧ್ಯಕ್ಷರಾದ ನಳಿನಿ ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
‘ಪಟ್ಟಣ ಪಂಚಾಯಿತಿ ವ್ಯಾಪ್ತಿ ಚಿಕ್ಕದಿರುವುದರಿಂದ ಅಕ್ಕಪಕ್ಕದ ಚೌಡ್ಲು, ಹಾನಗಲ್ಲು, ಬೇಳೂರು ಗ್ರಾಮ ಪಂಚಾಯಿತಿಯ ಕೆಲ ಪ್ರದೇಶಗಳು ಸೇರ್ಪಡೆಗೊಂಡರೆ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬಹುದು. ಸದಸ್ಯರು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕಡತ ಸಿದ್ದಪಡಿಸಿ ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿದರೆ, ಸರ್ಕಾರದೊಂದಿಗೆ ವ್ಯವಹರಿಸಲಾಗುವುದು. ಪಟ್ಟಣದಲ್ಲಿ ಪ್ರಮುಖವಾಗಿ ಕಸವಿಲೇವಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಬೇಕು’ ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಬಿ.ಸಂಜೀವ ಮಾತನಾಡಿ, ‘ಕಡಿಮೆ ದರಕ್ಕೆ ಟೆಂಡರ್ ಹಾಕಿ, ನಂತರ ಕಳಪೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಕೆಲ ಗುತ್ತಿಗೆದಾರರು ಟೆಂಡರ್ನಲ್ಲಿ ಶೇ 30ರಷ್ಟು ಕಡಿಮೆ ದರಕ್ಕೆ ಟೆಂಡರ್ ಹಾಕುತ್ತಾರೆ. ಆದರೆ, ಕಾಮಗಾರಿ ಮಾಡುವುದಿಲ್ಲ. ಎಂಜಿನಿಯರ್ಗಳು ಸ್ಥಳದಲ್ಲಿದ್ದು ಕಾಮಗಾರಿ ಉಸ್ತುವಾರಿ ವಹಿಸುತ್ತಿಲ್ಲ’ ಎಂದು ದೂರಿದರು.
‘ಅಂತಹ ಗುತ್ತಿಗೆದಾರರಿಗೆ ಯಾವುದೇ ಕಾಮಗಾರಿ ನೀಡಬಾರದು. ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕರು ಸೂಚಿಸಿದರು.
ಸದಸ್ಯ ಜೀವನ್, ನಾಮ ನಿರ್ದೇಶಿತ ಸದಸ್ಯ ಎಸ್.ಆರ್.ಸೋಮೇಶ್, ಬಿ.ಆರ್.ಮಹೇಶ್, ಸದಸ್ಯರಾದ ಶೀಲಾ ಡಿಸೋಜ, ಜಯಂತಿ ಶಿವಕುಮಾರ್, ಎಸ್. ಮಹೇಶ್,ನಾಗರತ್ನ ವಿವಿಧ ಸಮಸ್ಯೆಗಳ ಬಗ್ಗೆ ಪ್ರಸ್ತಾಪ
ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.