ADVERTISEMENT

ಸೋಮವಾರಪೇಟೆ: ಭಾರಿ ಮಳೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 14:30 IST
Last Updated 26 ಜೂನ್ 2025, 14:30 IST
ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದ ಕುವೆಂಪು ವಿದ್ಯಾಸಂಸ್ಥೆಯ ಕಾಂಪೌಂಡ್ ಕುಸಿದಿರುವುದು.
ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದ ಕುವೆಂಪು ವಿದ್ಯಾಸಂಸ್ಥೆಯ ಕಾಂಪೌಂಡ್ ಕುಸಿದಿರುವುದು.   

ಸೋಮವಾರಪೇಟೆ: ತಾಲ್ಲೂಕಿನಾದ್ಯಂತ ಮುಂಗಾರು ಮಳೆಯ ರಭಸ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಟ್ಗದಳ್ಳಿ ಗ್ರಾಮ ಪಂಚಾಯಿತಿ, ಶಾಂತಳ್ಳಿ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಂಡಿಗೆ, ಸೂರ್ಲಬ್ಬಿ, ಕಿಕ್ಕರಳ್ಳಿ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನರು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. 

‘ಕುಂಬಾರಗಡಿಗೆ ಗ್ರಾಮದಲ್ಲಿ ವಿದ್ಯುತ್ ಮಾರ್ಗದ ಮೇಲೆ ಮರಗಳು ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ’ ಎಂದು ಕನ್ನಿಗಂಡ ಪಳಂಗಪ್ಪ ಮಾಹಿತಿ ನೀಡಿದ್ದಾರೆ.

ADVERTISEMENT

ಕುಂಬಾರಗಡಿಗೆ ಗ್ರಾಮಸ್ಥರು ಶ್ರಮದಾನದ ಮೂಲಕ ವಿದ್ಯುತ್ ಮಾರ್ಗದಲ್ಲಿರುವ ಮರದ ರೆಂಬೆಗಳನ್ನು ಕತ್ತರಿಸಿ ತೆಗೆಯುವ ಮೂಲಕ ವಿದ್ಯುತ್ ಸಂಪರ್ಕ ಸರಿಪಡಿಸಲು ಮುಂದಾಗಿದ್ದಾರೆ.

ಶಾಂತಳ್ಳಿ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಮಳೆಯ ರಭಸ ಹೆಚ್ಚಾಗಿದೆ. ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ ಹೋಬಳಿಯಲ್ಲೂ ಮಳೆ ಸುರಿಯುತ್ತಿದೆ. ಅನೇಕ ಕಡೆ ಭೂಮಿಯೊಳಗಿಂದ ಅಂತರ್ಜಲ ಉಕ್ಕಿ ಹರಿಯುತ್ತಿರುವುದನ್ನು ಕಾಣಬಹುದಾಗಿದೆ.

ಚೌಡ್ಲು ಗ್ರಾಮದಲ್ಲಿರುವ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಕಾಂಪೌಂಡ್ ಸ್ವಲ್ಪ ಭಾಗ ಕುಸಿದಿದೆ. ಸ್ಥಳಕ್ಕೆ ತಹಶೀಲ್ದಾರ್ ಕೃಷ್ಣಮೂರ್ತಿ, ಬಿಇಒ ಭಾಗ್ಯಮ್ಮ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳು ತೆರಳದಂತೆ ನೋಡಿಕೊಳ್ಳಬೇಕು ಎಂದು ಆಡಳಿತ ಮಂಡಳಿಯವರಿಗೆ ತಿಳಿಸಿದರು.

‘ಮಳೆ ನಿಂತ ತಕ್ಷಣ ಕುಸಿದಿರುವ ಭಾಗವನ್ನು ಭದ್ರವಾಗಿ ಸರಿಪಡಿಸಲಾಗುವುದು’ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ತಿಳಿಸಿದರು.

ಸೋಮವಾರಪೇಟೆ ತಾಲ್ಲೂಕಿನ ಗುರುವಾರದ ಸರಾಸರಿ 9.84 ಸೆಂ.ಮೀ  ಮಳೆಯಾಗಿದೆ. ಜನವರಿಯಿಂದ ಇಲ್ಲಿಯ ವರೆಗಿನ ಮಳೆ 134.9 ಸೆಂ.ಮೀ ಮಳೆ ಸುರಿದಿದೆ. ಕಳೆದ ವರ್ಷ ಇದೆ ದಿನ 4.48 ಸೆಂ.ಮೀ. ಮಳೆಯಾಗಿತ್ತು. ಕಳೆದ ವರ್ಷದ ಇದೇ ಅವಧಿಗೆ 5.16 ಸೆಂ.ಮೀ ಮಳೆಯಾದ ವರದಿಯಾಗಿತ್ತು. ಶಾಂತಳ್ಳಿ ಹೋಬಳಿಯಲ್ಲಿ 17, ಸೋಮವಾರಪೇಟೆ ಕಸಬಾ ಹೋಬಳಿಯಲ್ಲಿ 8, ಕೊಡ್ಲಿಪೇಟೆ ಹೋಬಳಿಯಲ್ಲಿ 7.3 ಹಾಗೂ ಶನಿವಾರಸಂತೆ 6.80 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.