
ಸೋಮವಾರಪೇಟೆ: ವಿದ್ಯಾರ್ಥಿಗಳು ಪ್ರವಾಸದ ವೇಳೆ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿ ಅವುಗಳ ಇತಿಹಾಸ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ತಿಳಿಯುವ ಪ್ರಾಚ್ಯಪ್ರಜ್ಞೆ ಬೆಳೆಸಿಕೊಳ್ಳಬೇಕು. ಸ್ಮಾರಕಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ ಹೇಳಿದರು.
ಕರ್ನಾಟಕ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಶನಿವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಾಚ್ಯ ಪ್ರಜ್ಞೆ ಕುರಿತು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ನಾವು ಪ್ರಾಚೀನ ಕಾಲದ ಕಲೆ, ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಾಚ್ಯವಸ್ತು ಸ್ಮಾರಕಗಳು, ಸಂಗ್ರಹಾಲಯಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದೆ. ಕರ್ನಾಟಕದ ಪ್ರಾಚೀನ ಸ್ಮಾರಕಗಳ ಸಂರಕ್ಷಿಸುವಲ್ಲಿ ಇರುವ ಸವಾಲುಗಳ ಬಗ್ಗೆ ನಾವು ಜಾಗೃತರಾಗುವ ಮೂಲಕ ಅವುಗಳ ಸಂರಕ್ಷಣೆಗೆ ಒತ್ತು ನೀಡಬೇಕಿದೆ ಎಂದರು.
ಪ್ರಾಚೀನ ಸಂಗ್ರಹಾಲಯಗಳ ಮಹತ್ವದ ಕುರಿತು ಮಾತನಾಡಿದ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಭಾರತದ ಇತಿಹಾಸ ಪ್ರತಿಬಿಂಬಿಸುವ ಸ್ಮಾರಕಗಳು ನಮ್ಮ ನಾಗರಿಕತೆಯ ಪ್ರಖ್ಯಾತ ಚಿಹ್ನೆಗಳಾಗಿವೆ ಎಂದರು.
ನೋಡಲ್ ಅಧಿಕಾರಿ ಎಸ್.ಎಸ್.ಶಿವಕುಮಾರ್, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ವಿ.ಶೈಲಾ, ಮಾದಾಪುರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪಾಲಾಕ್ಷ, ಶಿಕ್ಷಣ ಸಂಯೋಜಕಿ ಎಸ್.ಬಿ.ಯಾದಕುಮಾರಿ, ಸಿಆರ್ಗಳಾದ ವಿ.ಪ್ರೇಮ, ಡಿ.ಆರ್. ಗಿರೀಶ್, ಎಂ.ಎನ್.ಚೈತ್ರ, ಸಂಪನ್ಮೂಲ ಶಿಕ್ಷಕರಾದ ಡಿ.ವಿಜಯ್ ಕುಮಾರ್ , ಬಿಪಿನ್ ಕುಮಾರ್ ಹಾಗೂ ಆರ್. ದಿವಾಕರ್ ಇದ್ದರು.
ವಿದ್ಯಾರ್ಥಿಗಳಿಗೆ ಪ್ರಾಚ್ಯ ಪ್ರಜ್ಞೆ ಕುರಿತು ಪ್ರಬಂಧ, ಭಾಷಣ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಬಂಧ, ಭಾಷಣ, ಚಿತ್ರಕಲೆ ಸ್ಪರ್ಧೆಗಳು ನಡೆದವು. ಕರ್ನಾಟಕದ ಐತಿಹಾಸಿಕ ಸ್ಮಾರಕಗಳ ಬಗ್ಗೆ ರಸಪ್ರಶ್ನೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.