ADVERTISEMENT

ಸೋಮವಾರಪೇಟೆ ತಾಲ್ಲೂಕು ಬಂದ್ 12ರಂದು

ರೈತರ ಕೃಷಿ ಭೂಮಿ ಸಿ ಆ್ಯಂಡ್‌ ಡಿ ಹೆಸರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 6:09 IST
Last Updated 10 ಆಗಸ್ಟ್ 2025, 6:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸೋಮವಾರಪೇಟೆ: ರೈತರ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸುವುದು, ಸರ್ಕಾರದ ಸೆಕ್ಷನ್-4 ಸರ್ವೆಗೆ ಮುಂದಾಗಿರುವುದನ್ನು ಖಂಡಿಸಿ ಆ.12ರಂದು ತಾಲ್ಲೂಕು ಬಂದ್ ನಡೆಸಲಾಗುವುದು ಎಂದು ರೈತ ಹೋರಾಟ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಬಿ.ಸುರೇಶ್ ತಿಳಿಸಿದರು.

ಶುಕ್ರವಾರ ನಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.11ರಂದು ನಡೆಸಬೇಕಿದ್ದ ತಾಲ್ಲೂಕು ಬಂದನ್ನು ಅನಿವಾರ್ಯಕಾರಣಗಳಿಂದ ಒಂದು ದಿನ ಮುಂದೂಡಿ, 12ಕ್ಕೆ ನಡೆಸಲಾಗುತ್ತಿದೆ. ವರ್ತಕರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ADVERTISEMENT

ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ ಸುಮಾರು 25 ಸಾವಿರ ಎಕರೆಯಷ್ಟು ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಕಳೆದುಕೊಳ್ಳಬೇಕಾಗಿದೆ. ರೈತರು ಅನೇಕ ದಶಕಗಳ ಹಿಂದಿನಿಂದಲೂ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದಾರೆ. ಅನೇಕ ವರ್ಷಗಳಿಂದ ಕಂದಾಯ ಇಲಾಖೆಗೆ ನಮೂನೆ 50, 53, 57 ಅರ್ಜಿ ಸಲ್ಲಿಸಿಕೊಂಡು ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಭೂಮಿಯೆಂದು ಸರ್ವೆಗೆ ಮುಂದಾಗಿರುವುದು ಖಂಡನೀಯ ಎಂದರು.

ತಾಲ್ಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಬಹುತೇಕ ರೈತರು ಸಿ ಆ್ಯಂಡ್ ಡಿ ಭೂಮಿಯಲ್ಲೇ ಕೃಷಿ ಮಾಡಿದ್ದಾರೆ. ಮನೆ ನಿರ್ಮಿಸಿಕೊಂಡಿದ್ದಾರೆ. ಭತ್ತ, ಕಾಫಿ, ಏಲಕ್ಕಿ, ಬಾಳೆ, ತರಕಾರಿ ಬೆಳೆಯುತ್ತಿದ್ದಾರೆ. ಈ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಎಂದು ಘೋಷಣೆ ಮಾಡಿದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಹಿಂದಿನ ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚೆಯಾಗಿದ್ದು, ಉನ್ನತಮಟ್ಟದ ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಅರಣ್ಯ, ಕಂದಾಯ ಸಚಿವರು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಸಮಸ್ಯೆ ಬಗೆಹರಿಸಿಲ್ಲ. ಆ.12 ರ ತಾಲ್ಲೂಕು ಬಂದ್ ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಮಾತನಾಡಿ, ರೈತರು ಒಗ್ಗಟ್ಟಾದರೆ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಬಹುದು. ತಾಲ್ಲೂಕಿನ ಸಂಘ ಸಂಸ್ಥೆಗಳು ಬಂದ್ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಇಂದಿರಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಜಯರಾಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.