ವಿರಾಜಪೇಟೆ: ‘ಕ್ರೀಡೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು’ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಮತು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯಿಂದ ಈಚೆಗೆ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕೊಡಗು ಕ್ರೀಡೆಗಳ ತವರೂರು, ಜಿಲ್ಲೆಯ ಸಾಕಷ್ಟು ಮಂದಿ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿ ಜಿಲ್ಲೆಯ ಹೆಸರನ್ನು ಉನ್ನತ ಮಟ್ಟಕ್ಕೇರಿಸಿದ್ದಾರೆ. ಕ್ರೀಡೆಗಳು ಸೋಲು ಮತ್ತು ಗೆಲುವನ್ನು ಸ್ವೀಕರಿಸುವುದನ್ನು ಕಲಿಸುತ್ತದೆ’ ಎಂದರು.
ಪ್ರಗತಿ ಶಾಲೆಯ ಸಂಸ್ಥಾಪಕ ಮಾದಂಡ ಎಸ್. ಪೊವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಎಂ.ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಜಲೀಲ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಎ. ಪ್ರವೀಣ್, ಸಂಘದ ಪ್ರಮುಖರಾದ ಡಾ. ಸೋಮಯ್ಯ ಹಾಗೂ ಎಂ.ಎಸ್. ತಮ್ಮಯ್ಯ ಉಪಸ್ಥಿತರಿದ್ದರು.
ವಿರಾಜಪೇಟೆ ವಲಯ, ಪೊನ್ನಂಪೇಟೆ ವಲಯ, ಅಮ್ಮತ್ತಿ ವಲಯ, ಬಾಳಲೆ ವಲಯ, ಹುದಿಕೇರಿ ವಲಯ ಮತ್ತು ಶ್ರೀಮಂಗಲ ವಲಯದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಪ್ರಗತಿ ಶಾಲೆಯ ಆಡಳಿತಾಧಿಕಾರಿ ಮಾದಂಡ ತಿಮ್ಮಯ್ಯ, ಸುಶ್ಮಾ ತಿಮ್ಮಯ್ಯ, ಮುಖ್ಯ ಶಿಕ್ಷಕರು ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.