ADVERTISEMENT

ರಾಜ್ಯ ಹೋಟೆಲ್ ಅಸೋಸಿಯೇಷನ್‌: ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ 31ಕ್ಕೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 4:03 IST
Last Updated 19 ಆಗಸ್ಟ್ 2024, 4:03 IST

ಕುಶಾಲನಗರ: ‘ರಾಜ್ಯ ಹೋಟೆಲ್ ಅಸೋಸಿಯೇಷನ್‌ನಿಂದ ಬೆಂಗಳೂರಿನಲ್ಲಿ ಆ.31 ರಂದು ರಾಜ್ಯಮಟ್ಟದ ಸಭೆ ಹಮ್ಮಿಕೊಳ್ಳಲಾಗಿದ್ದು, ಹೋಟೆಲ್ ಉದ್ಯಮಿಗಳ ಸಮಸ್ಯೆಗಳನ್ನು ಚರ್ಚಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು‌ ಮಾರ್ಗಸೂಚಿ ಸಿದ್ಧಪಡಿಸಲಾಗುವುದು’ ಎಂದು ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟರ್ ಹೇಳಿದರು.

ಇಲ್ಲಿನ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಲ್ಲರಂತೆ ಹೋಟೆಲ್ ಉದ್ದಿಮೆದಾರರು ಕೂಡ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ಘಟಕದ ಪ್ರಮುಖರು ಪ್ರತಿ ಜಿಲ್ಲೆಗಳಿಗೂ ಪ್ರವಾಸ ಮಾಡಿ ಆಯಾ ಜಿಲ್ಲೆಗಳ ‌ಸಂಘಗಳ ಪ್ರಮುಖರನ್ನು ಭೇಟಿ ಮಾಡುತ್ತಿದ್ದೇವೆ. 31 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಉದ್ದಿಮೆದಾರರನ್ನು ಒಗ್ಗೂಡಿಸಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲಿದ್ದೇವೆ.‌ ಅಲ್ಲಿ ಸಿದ್ಧಪಡಿಸುವ ಮಾರ್ಗಸೂಚಿ ಅನ್ವಯ ಸರ್ಕಾರದಿಂದ ಪರಿಹಾರಕ್ಕೆ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

‘ಮಹಾನಗರ ಪಾಲಿಕೆ, ನಗರ ಪ್ರದೇಶಗಳಂತೆ ಗ್ರಾಮ ಪಂಚಾಯಿತಿ‌ ಮಟ್ಟದಲ್ಲಿ ತೆರಿಗೆ ಕ್ರಮ ಏಕ ರೂಪವಾಗಿಲ್ಲ. ವಿವಿಧ ರೀತಿಯ ಕಾನೂನು, ಪರವಾನಗಿ ತೆರಿಗೆ ಕ್ರಮಗಳನ್ನು ಸರಳೀಕರಣಗೊಳಿಸುವ ಅಗತ್ಯವಿದೆ. ಇಲಾಖೆ ಹಾಗೂ ಸರ್ಕಾರ ಮತ್ತು ಉದ್ದಿಮೆದಾರರ ನಡುವೆ ಸೇತುವೆಯಂತಿರುವ ಸಂಘವು ಉದ್ದಿಮೆದಾರರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಮಟ್ಟದಿಂದ ಸಭೆಗೆ ಉದ್ದಿಮೆದಾರರನ್ನು ಆಹ್ವಾನಿಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಸಂಘದ ಕಾರ್ಯದರ್ಶಿ ರಾಘವೇಂದ್ರ ಮಾತನಾಡಿ, ‘ಹೂಡಿದ ಬಂಡವಾಳಕ್ಕಿಂತ ಗುಣಮಟ್ಟ ಕಾಪಾಡಿಕೊಂಡು ವಹಿವಾಟು ನಡೆಸುವಲ್ಲಿ ಪ್ರತಿ ದಿನ ಉದ್ದಿಮೆದಾರರು ಆತಂಕ ಎದುರಿಸುತ್ತಿದ್ದಾರೆ. ಈ ಕ್ಷೇತ್ರಕ್ಕೆ ಉತ್ತಮ ಬೆಲೆ ಸಿಗುವಂತಾಗಬೇಕಿದೆ. ಈ ನಿಟ್ಟಿನಲ್ಲಿ ಸ್ನೇಹ ಚಿಂತನೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಖಜಾಂಚಿ ಗುರುರಾಜ್, ವಿಭಾಗೀಯ ಅಧ್ಯಕ್ಷ ವಿಜಯ್ ಕುಮಾರ್, ಉಪಾಧ್ಯಕ್ಷ ರವಿ ಕುಮಾರ್, ಮೈಸೂರು ಜಿಲ್ಲಾಧ್ಯಕ್ಷ ನಾರಾಯಣ ಗೌಡ, ಕೊಡಗು ಜಿಲ್ಲಾ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಪ್ರಮುಖರಾದ ಭಾಸ್ಕರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.