
ಕುಶಾಲನಗರ :ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಘಟಕದ ಪದಗ್ರಹಣ.
ಬೀದಿ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ಧ : ಶಾಸಕ ಮಂತರ್ ಗೌಡ.
ಕುಶಾಲನಗರ: ‘ಬೀದಿ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಜೀವನಮಟ್ಟ ಉತ್ತಮಪಡಿಸಿಕೊಳ್ಳಬೇಕು’ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೀದಿಬದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಬೀದಿಬದಿ ವ್ಯಾಪಾರಿಗಳ ಘಟಕವನ್ನು ಸ್ಥಾಪಿಸುವ ಮೂಲಕ ಅವರಿಗೆ ಬೆನ್ನೆಲುಬಾಗಿ ನಿಂತಿದೆ. ಘಟಕದ ಪದಾಧಿಕಾರಿಗಳು ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಶ್ರಮಿಸಬೇಕು’ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ‘ತಾಜಾ ವಸ್ತುಗಳು ಸಿಗುವುದು ಬೀದಿಬದಿ ವ್ಯಾಪಾರಿಗಳ ಹತ್ತಿರ. ಹಲವು ತೊಂದರೆಗಳನ್ನು ಅನುಭವಿಸುತ್ತಿರುವವರೂ ಬೀದಿಬದಿ ವ್ಯಾಪಾರಿಗಳೇ. ಅವರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ’ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳು ಭವಿಷ್ಯಕ್ಕೆ ಹಣವನ್ನು ಕೂಡಿಟ್ಟುಕೊಳ್ಳಬೇಕು. ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಅತಿ ಹೆಚ್ಚಿನ ಸಾಲ ಪಡೆದು ವ್ಯಾಪಾರ ಅಭಿವೃದ್ಧಿಪಡಿಸಬೇಕು’ ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಬಿದಿಬದಿ ವ್ಯಾಪಾರಿಗಳ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಆದಂ ಅಧ್ಯಕ್ಷತೆ ವಹಿಸಿದ್ದರು. ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಕ್ರಮ –ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ ಎಂ.ಎಂ. ಪ್ರಕಾಶ್, ಬೀದಿ ಬದಿ ವ್ಯಾಪಾರಿಗಳ ಮಹಿಳಾ ಘಟಕದ ಜಿಲ್ಲಾ ಘಟಕದ ಅಧ್ಯಕ್ಷೆ ಸಲೀನಾ ಪೇದ್ರು, ಒಕ್ಕೂಟದ ಅಧ್ಯಕ್ಷ ಜಗದೀಶ್ ರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.