ADVERTISEMENT

ಕೋವಿಡ್‌ ರೋಗಿಯ ಚಿಕಿತ್ಸೆಗೆ ಹಣ: ಜಿಲ್ಲಾ ಆಸ್ಪತ್ರೆಯ ವೈದ್ಯ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಮೇ 2021, 14:41 IST
Last Updated 19 ಮೇ 2021, 14:41 IST

ಮಡಿಕೇರಿ: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಅವರ ಸಂಬಂಧಿಕರಿಂದ ಹಣ ಪಡೆದ ಆರೋಪದ ಮೇರೆಗೆ ಜಿಲ್ಲಾ ಆಸ್ಪತ್ರೆ ವೈದ್ಯ ಡಾ.ಎ.ಸಿ. ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಬುಧವಾರ ಅಮಾನತು ಮಾಡಿದ್ದಾರೆ.

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಆರೋಗ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವಕುಮಾರ ಅವರನ್ನು, ಈಚೆಗೆ ಕೋವಿಡ್‌ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ನಿಯೋಜಿಸಲಾಗಿತ್ತು. ರೋಗಿಯ ಶುಶ್ರೂಷೆಗಾಗಿ ಒಬ್ಬರಿಂದ ₹ 4 ಸಾವಿರ ಹಾಗೂ ಮತ್ತೊಬ್ಬರಿಂದ ₹ 500 ಪಡೆದಿದ್ದರು ಎನ್ನಲಾಗಿದೆ. ಹಣ ಪಡೆದ ಆರೋಪ ಕೇಳಿಬಂದ ಮೇಲೆ ಪ್ರಕರಣದ ವರದಿಯನ್ನು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದರು.

‘ಸರ್ಕಾರಿ ಕರ್ತವ್ಯದಲ್ಲಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಾಮವಳಿ 1966ರ ನಿಯಮ 3ರ ಅನ್ವಯ ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಭ್ರಷ್ಟಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.