ಮಡಿಕೇರಿ: ಪ್ರವಾಸಿಗರು ಹಾಗೂ ಸಾರ್ವಜನಿಕರು ಜಲಪಾತಗಳು ಹಾಗೂ ನದಿದಂಡೆಯಲ್ಲಿ ಹತ್ತಿರದಿಂದ ಫೋಟೊ ತೆಗೆಯುವುದು, ವಿಡಿಯೊ ತೆಗೆಯುವುದು, ರೀಲ್ಸ್ಗಳನ್ನು ಮಾಡಬಾರದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ.
ಒಂದು ವೇಳೆ ಪ್ರವಾಸಿಗರು ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿದಲ್ಲಿ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಪ್ರವಾಸಿಗರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಕಲ್ಲು ಬಂಡೆಗಳು, ಒದ್ದೆಯಾಗಿ ಜಾರುತ್ತಿವೆ. ಇಲ್ಲೆಲ್ಲ ಬಹು ಎಚ್ಚರದಿಂದ ಇರಬೇಕು ಎಂದು ಹೇಳಿದ್ದಾರೆ.
ಈಗ ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಇವುಗಳನ್ನು ವಿಕ್ಷೀಸಲು ಬರುವಂತಹ ಸಾರ್ವಜನಿಕರು, ಪ್ರವಾಸಿಗರು ಸೌಂದರ್ಯಕ್ಕೆ ಮನಸೋತು ಬಹಳ ಹತ್ತಿರದಿಂದ ಪೋಟೋ ಅಥವಾ ವಿಡಿಯೋ ತೆಗೆಯುವ, ರೀಲ್ಸ್ ಮಾಡುವ ಅನಗತ್ಯ ಸಾಹಸ ಮಾಡಬಾರದು ಎಂದಿದ್ದಾರೆ.
ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಹೊಸ ಪ್ರದೇಶದಲ್ಲಿ ಅಲ್ಲಿನ ಪರಿಸರದ ಬಗ್ಗೆ ಅರಿವಿರುವುದಿಲ್ಲ. ಸ್ಥಳೀಯರ ಮಾತುಗಳನ್ನು ಗೌರವಿಸಿ, ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳನ್ನು ಅನುಸರಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ, ಸೂಕ್ತ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಮಿತ್ರರನ್ನೂ ಸಹ ನಿಯೋಜಿಸಲಾಗಿದೆ. ಆದರೂ ಸಹ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ನೀಡಿರುವ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿ ತಮ್ಮ ಅಮೂಲ್ಯ ಜೀವವನ್ನು ಹಾನಿ ಮಾಡಿಕೊಳ್ಳುವ ಸಾಹಸಕ್ಕೆ ಕೈ ಹಾಕದಂತೆ ಅವರು ಸೂಚಿಸಿದ್ದಾರೆ.
ಒಂದು ಸಣ್ಣ ತಪ್ಪು ನಡೆ ಜೀವಕ್ಕೆ ಎರವಾದೀತು ಎಂಬುದನ್ನು ಪ್ರವಾಸಿಗರು ಮನಗಂಡು ಜವಾಬ್ದಾರಿಯಿಂದ ವರ್ತಿಸಬೇಕು ಹಾಗೂ ಹೋಟೆಲ್, ಹೋಂ-ಸ್ಟೇ, ರೆಸಾರ್ಟ್ಗಳಲ್ಲಿ ತಂಗುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಮಾಲೀಕರು ಅಥವಾ ಸಿಬ್ಬಂದಿ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಜಾಗೃತಿ ಹಾಗೂ ಸುರಕ್ಷತೆಯಿಂದ ಇರುವ ಬಗ್ಗೆ ಅರಿವು ಮೂಡಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.