ಮಡಿಕೇರಿ: ‘ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು' ಎಂದು ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ. ಶ್ಯಾಂಪ್ರಸಾದ್ ಎಚ್ಚರಿಸಿದ್ದಾರೆ.
ಸಂಘದ ಪದಾಧಿಕಾರಿಗಳು ಈಚೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ದೂರಿದ್ದಾರೆ.
ರಾಜ್ಯದಲ್ಲಿ 12,457 ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜಿಲ್ಲೆಯ ಅತಿಥಿ ಶಿಕ್ಷಕರಿಗೂ ಕಳೆದ ಮೂರು ತಿಂಗಳಿಂದ ವೇತನವನ್ನೇ ನೀಡಿಲ್ಲ. ಸರ್ಕಾರ ಸೇವಾ ಭದ್ರತೆ, ವೇತನ ಹೆಚ್ಚಳ, ಕಾಯಂಗೊಳಿಸುವ ಸಂಬಂಧ ಭರವಸೆಯನ್ನಷ್ಟೇ ನೀಡುತ್ತಿದೆ. ಆದರೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ದೂರಿದ್ದಾರೆ.
ಉಪನ್ಯಾಸಕರಿಗೆ ಈಗಾಗಲೇ ನೀಡುತ್ತಿರುವ ಮಾಸಿಕ ₨ 11 ಸಾವಿರ ಮಾಸಿನ ಗೌರವಧನ ಸಾಲದು. ಅದನ್ನು ₹ 25 ಸಾವಿರಕ್ಕೆ ಏರಿಸಬೇಕು. ವೇತನವನ್ನು ಪ್ರತಿ ತಿಂಗಳು ಪಾವತಿಸಬೇಕು. ಜತೆಗೆ, ಸೇವಾ ಭದ್ರತೆ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.