ADVERTISEMENT

ಹಾರಂಗಿಯಿಂದ ನದಿಗೆ 10 ಸಾವಿರ ಕ್ಯುಸೆಕ್ ನೀರು

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 6:44 IST
Last Updated 2 ಜುಲೈ 2022, 6:44 IST
   

ಮಡಿಕೇರಿ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಲ್ಲಿನ ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗಿದೆ. ಶನಿವಾರ ಬೆಳಿಗ್ಗೆಯಿಂದ ಎಲ್ಲ 4 ಕ್ರೆಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ಸುಮಾರು 10 ಸಾವಿರ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠಮಟ್ಟ 2,859 ಅಡಿ ಇದ್ದು, ಶನಿವಾರ 2,856.53 ಅಡಿ ಇತ್ತು. ಜಲಾಶಯಕ್ಕೆ 4,321 ಕ್ಯುಸೆಕ್‌ ಒಳಹರಿವು ಇತ್ತು. ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಶನಿವಾರ ಜಲಾಶಯಕ್ಕೆ ಬಾಗಿನ ಸಲ್ಲಿಸಿದರು.

‘ಜಲಾಶಯದ ಭದ್ರತೆ ದೃಷ್ಟಿಯಿಂದ ನೀರಿನ ಮಟ್ಟವನ್ನು 2,857 ಅಡಿಗಳಿಗೆ ಕಾಯ್ದಿರಿಸಿ ನೀರು ಹರಿಸಲಾಗುತ್ತಿದೆ. ನದಿಪಾತ್ರದ ಜನರ ಸುರಕ್ಷತೆ ದೃಷ್ಟಿಯಿಂದ ಮೊದಲ ಹಂತವಾಗಿ 10 ಸಾವಿರ ಕ್ಯುಸೆಕ್‌ ನೀರನ್ನು ಮಾತ್ರ ನದಿಗೆ ಹರಿಬಿಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹಾಗೂ ಒಳಹರಿವಿನ ಪ್ರಮಾಣ ಆಧರಿಸಿ ನೀರು ಬೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ತಿಳಿಸಿದರು.

ADVERTISEMENT

ಸುರಕ್ಷಿತ ಸ್ಥಳಕ್ಕೆ ಹೋಗಲು ಸೂಚನೆ: ‘ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಿರುವುದರಿಂದ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಮೀನುಗಾರರು ಹಾಗೂ ರೈತರು ತಮ್ಮ ಜಾನುವಾರುಗಳನ್ನು ನದಿಗೆ ಇಳಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಂದ್ರ ಕುಮಾರ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.