ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಶುಕ್ರವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ಗ್ರಾಮಸಹಾಯಕರ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ನೂರಾರು ಮಂದಿ ಅಧಿಕಾರಿಗಳು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಕಪ್ಪುಪಟ್ಟಿ ಧರಿಸಿ ಮೌನವಾಗಿ ಪ್ರತಿಭಟಿಸಿದರು.
ಇತ್ತೀಚಿನ ದಿನಗಳಲ್ಲಿ ಕೆಲಸ ಒತ್ತಡ ಹೆಚ್ಚಾಗಿದೆ. ಇದರಿಂದ ಜೀವನ ನಡೆಸಲು ದುಸ್ತರವಾಗಿದೆ ಎಂದು ಅವರು ಅಳಲು ತೋಡಿಕೊಂಡರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ಮೊಬೈಲ್ ಆ್ಯಪ್ಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಅಕ್ಷತಾ ಬಿ ಶೆಟ್ಟಿ ಮಾತನಾಡಿ, ‘ನಮ್ಮ ಕಷ್ಟ ಹೇಳಿಕೊಳ್ಳಲು ಈ ಶಾಂತಿಯುತ ಪ್ರತಿಭಟನೆಯನ್ನು ರಾಜ್ಯಾದ್ಯಂತ ಮಾಡುತ್ತಿದ್ದೇವೆ. ಮೊಬೈಲ್, ಸ್ಕ್ಯಾನರ್, ಇಂಟರ್ನೆಟ್ ಸೇರಿದಂತೆ ಕಾರ್ಯನಿರ್ವಹಣೆಗೆ ಬೇಕಾದ ಮೂಲಸೌಕರ್ಯ ಒದಗಿಸದೇ ಪ್ರಗತಿ ಸಾಧಿಸಲು ಒತ್ತಡ ಹೇರುತ್ತಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.
‘ಸರ್ಕಾರ ಈಗ 17 ಆ್ಯಪ್ಗಳನ್ನು ಕೊಟ್ಟು ಒಟ್ಟಿಗೆ ಪ್ರಗತಿ ಸಾಧಿಸಬೇಕು ಎಂದು ಹೇಳುತ್ತಿದೆ. ನಾವೂ ಮನುಷ್ಯರು, ಇಷ್ಟು ಒತ್ತಡ ಹಾಕುತ್ತಾರೆ. ಒಂದಿಷ್ಟೂ ಸಮಯ ಕೊಡದೇ ಒತ್ತಡ ಹೇರಲಾಗುತ್ತಿದೆ’ ಎಂದು ಅವರು ಆರೋಪಿಸಿದರು.
ಗ್ರಾಮಸಹಾಯಕರ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ಜನಾರ್ದನ್ ಮಾತನಾಡಿ, ‘ಪ್ರತಿಭಟನೆಗೆ ಗ್ರಾಮಸಹಾಯಕರ ಸಂಘವೂ ಬೆಂಬಲ ನೀಡಿದೆ. ನಾವೂ ಕೆಲಸ ಸ್ಥಗಿತಗೊಳಿಸಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.