ಕುಶಾಲನಗರ: ಇಲ್ಲಿನ ಕಣಿವೆ ಗ್ರಾಮದಲ್ಲಿ ಮಾರ್ಚ್ 30ರಂದು ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮರಥೋತ್ಸವವು ನಡೆಯಲಿದ್ದು, ದೇವಸ್ಥಾನ ಸಮಿತಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ಮಧ್ಯಾಹ್ನ 12.48 ಗಂಟೆಗೆ ಜರುಗಲಿರುವ ಈ ಬ್ರಹ್ಮರಥೋತ್ಸವದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿಂತೆ ಯಾವುದೇ ಜಾತಿ, ಮತ ಭೇದವಿಲ್ಲದೇ ಎಲ್ಲರೂ ಒಗ್ಗೂಡಿ ತೇರು ಎಳೆದು ಹಬ್ಬ ಆಚರಿಸುವ ಮೂಲಕ ಸಾಮರಸ್ಯಕ್ಕೆ ಇದು ಹೆಸರಾಗಿದೆ.
ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಾಲಯದಲ್ಲಿ ಪ್ರತಿ ವರ್ಷವೂ ಯುಗಾದಿ ಹಬ್ಬ ಕಳೆದು 7 ದಿನಗಳಿಗೆ ಬ್ರಹ್ಮರಥೋತ್ಸವ ನಡೆಯುವುದು ಸಂಪ್ರದಾಯ. ರಥೋತ್ಸವಕ್ಕೆ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ಹಾಸನ ಮತ್ತು ಮೈಸೂರು ಜಿಲ್ಲೆ ಗಡಿಭಾಗದ ಗ್ರಾಮಗಳಿಂದಲೂ ಅಪಾರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.
ಹೆಬ್ಬಾಲೆ ಬಸವೇಶ್ವರ ದೇವಸ್ಥಾನ ಸಮಿತಿಯವರು ಕಾಶಿಯಿಂದ ತೀರ್ಥವನ್ನು ತರಿಸಿ ಅದನ್ನು ಅಡ್ಡಪಲ್ಲಕ್ಕಿ ಮೂಲಕ ತಂದು ಕಣಿವೆ ರಾಮಲಿಂಗೇಶ್ವರನಿಗೆ ಪೂಜೆ, ಅಭಿಷೇಕ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ.
ಸೀತೆ ಅಪಹರಣಗೊಂಡಾಗ ಸೀತೆಯನ್ನು ಹುಡುಕಿಕೊಂಡು ಆಂಜನೇಯ ಮತ್ತು ಲಕ್ಷ್ಮಣನೊಂದಿಗೆ ಬಂದ ಶ್ರೀರಾಮನಿಗೆ ವ್ಯಾಘ್ರ ಮಹರ್ಷಿ ಶಿವಲಿಂಗವನ್ನು ತರಲು ಹೇಳುತ್ತಾರೆ. ರಾಮ ಶಿವಲಿಂಗ ತರಲು ಆಂಜನೇಯನನ್ನು ಕಾಶಿಗೆ ಕಳುಹಿಸುತ್ತಾನೆ. ಆದರೆ, ಆಂಜನೇಯ ಶಿವಲಿಂಗ ತರುವುದು ವಿಳಂಬವಾಗಿದ್ದರಿಂದ ಶ್ರೀರಾಮ ಅಲ್ಲಿಯೇ ಮರಳಿನಿಂದ ಶಿವಲಿಂಗವನ್ನು ಮಾಡಿ ಪೂಜೆಗೆ ಅನುವು ಮಾಡಿಕೊಟ್ಟು, ಅಲ್ಲಿಂದ ತೆರಳಿದ. ಈ ಕಾರಣದಿಂದಾಗಿ ಕಣಿವೆ ದೇವಸ್ಥಾನದಲ್ಲಿರುವ ಲಿಂಗವನ್ನು ಮರಳುಲಿಂಗ ಎಂದೇ ಕರೆಯಲಾಗುತ್ತದೆ. ಆಂಜನೇಯನೂ ಶಿವಲಿಂಗವನ್ನು ತಂದಿದ್ದರಿಂದ ಆ ಲಿಂಗವನ್ನು ಪಕ್ಕದಲ್ಲೇ ಇರುವ ಲಕ್ಷ್ಮಣೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸಲಾಯಿತುಎಂದು ದೇವಾಲಯದ ಪ್ರಧಾನ ಅರ್ಚಕ ಎಚ್.ಆರ್.ರಾಘವೇಂದ್ರ ಆಚಾರ್ ಹೇಳುತ್ತಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.