ಕುಶಾಲನಗರ: ಕರ್ನಾಟಕ ರಾಜ್ಯ ನೇಕಾರ ಸಮುದಾಯ ಒಕ್ಕೂಟದ ವತಿಯಿಂದ 31 ಜಿಲ್ಲೆಗಳಲ್ಲೂ ನೇಕಾರ ಸಮುದಾಯದ ನಿಖರ ಮಾಹಿತಿ ತಿಳಿಯಲು ಪ್ರತ್ಯೇಕವಾಗಿ ಜಾತಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ಹೇಳಿದರು.
ಇಲ್ಲಿನ ಮಹಾಲಕ್ಷ್ಮಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ನೇಕಾರ ಸಮುದಾಯ ಸ್ವಾಗತಿಸುತ್ತದೆ. ಆದರೆ ರಾಜ್ಯದಲ್ಲಿರುವ ನೇಕಾರ ಸಮುದಾಯಗಳ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2014-15ನೇ ಸಾಲಿನಲ್ಲಿ ಆಯೋಗವು ಕೈಗೊಂಡ ಸಮೀಕ್ಷೆ ಪ್ರಕಾರ ನೇಕಾರ ಜನಸಂಖ್ಯೆ 9.30 ಲಕ್ಷ ಎಂದು ವರದಿ ನೀಡಿದ್ದಾರೆ. ಆದರೆ ರಾಜ್ಯದ 224 ಕ್ಷೇತ್ರಗಳಲ್ಲಿ ನೇಕಾರ ಸಮುದಾಯ ಜನಸಂಖ್ಯೆ 55 ಲಕ್ಷ ಇದೆ. ಆಯೋಗ ಸಲ್ಲಿಸಿದ ವರದಿ ತಪ್ಪಾಗಿದೆ. ಈ ಹಿನ್ನೆಲೆಯಲ್ಲಿ ನೇಕಾರ ಸಮುದಾಯದ ನಿಖರ ಜನಸಂಖ್ಯೆ ತಿಳಿದು ದಾಖಲಿಸುವ ಮೂಲಕ ಸರ್ಕಾರಕ್ಕೆ ಒಕ್ಕೂಟದಿಂದ ವರದಿ ಸಲ್ಲಿಸಲಾಗುತ್ತದೆ ಎಂದರು.
ನೇಕಾರ ಸಮುದಾಯಗಳ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಸುಮಾರು ಐದಾರು ಸಭೆಗಳನ್ನು ನಡೆಸಿ ಮರು ಸಮೀಕ್ಷೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿರುವ ಕ್ರಮವನ್ನು ನೇಕಾರ ಒಕ್ಕೂಟ ಸ್ವಾಗತಿಸುತ್ತದೆ. ಇದಕ್ಕೂ ಮೊದಲು ನೇಕಾರ ಒಕ್ಕೂಟದ ವತಿಯಿಂದ ಪ್ರತಿ ಹಳ್ಳಿ, ಹೋಬಳಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕವಾದ ಆ್ಯಪ್ ಹಾಗೂ ಅರ್ಜಿ ನಮೂನೆ ಕೂಡ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಜಿಲ್ಲಾವಾರು ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದವರ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ ಕುಟುಂಬ ಸದಸ್ಯರ ಅಂಕಿ–ಅಂಶಗಳನ್ನು ಸಂಗ್ರಹಿಸಿ ಆ್ಯಪ್ನಲ್ಲಿ ಅವುಗಳನ್ನು ದಾಖಲಿಸಲಿದೆ ಎಂದರು.
ಕೊಡಗು ಜಿಲ್ಲಾ ನೇಕಾರ ಸಂಘದ ಅಧ್ಯಕ್ಷ ಟಿ.ಕೆ.ಪಾಂಡುರಂಗ ಮಾತನಾಡಿ, ಕೊಡಗು ಜಿಲ್ಲೆಯಲ್ಲಿರುವ ದೇವಾಂಗ, ಕುರುಹಿನ ಶೆಟ್ಟಿ, ತಮಿಳು ದೇವಾಂಗ, ಪಟ್ಟಸಾಲಿ ಸಮಾಜ ಮತ್ತಿತರರು ತಮ್ಮ ಮಾಹಿತಿಯನ್ನು ಜಿಲ್ಲಾ ಸಮಿತಿಗೆ ನೀಡಬೇಕು ಎಂದರು. ರಾಜ್ಯ ಸಮಿತಿ ಆದೇಶದ ಮೇರೆ ಜಿಲ್ಲಾ ಹಾಗೂ ತಾಲ್ಲೂಕು, ಹೋಬಳಿ ಸಮಿತಿಯ ಪದಾಧಿಕಾರಿಗಳು ತಮ್ಮ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ತಮ್ಮ ಕುಟುಂಬ ವರ್ಗದ ಸಂಪೂರ್ಣ ಮಾಹಿತಿಯನ್ನು ನೀಡುವ ಮೂಲಕ ಜತಿಗಣತಿ ಸಮೀಕ್ಷೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ನೇಕಾರ ಸಮುದಾಯ ಒಕ್ಕೂಟದ ಉಪಾಧ್ಯಕ್ಷ ಎನ್.ಜಗದೀಶ್, ಪ್ರಧಾನ ಕಾರ್ಯದರ್ಶಿ ಶಿವಪ್ಪಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಜಗದೀಶ್ ಮುಖಂಡರಾದ ದಯಾನಂದ ಶೆಟ್ಟಿ, ಡಿ.ಕೆ.ತಿಮ್ಮಪ್ಪ, ಡಿ.ವಿ.ಜಗದೀಶ್, ಸ.ವಿ.ರಾಜೇಶ್, ಟಿ.ವಿ.ಪ್ರಕಾಶ್, ಗಜಾನನ, ರಮೇಶ್, ರಾಮಪ್ರಸಾದ್, ಪದ್ಮಾ ಮಹೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.