ADVERTISEMENT

ಶಾಂತಿ ಸುವ್ಯವಸ್ಥೆ ಕಾಪಾಡಲು ಗ್ರಾಮಗಸ್ತು: ಎಎಸ್‌ಪಿ ಬಿ.ಪಿ.ದಿನೇಶ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 7:17 IST
Last Updated 2 ಆಗಸ್ಟ್ 2025, 7:17 IST
ಕುಶಾಲನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಪೂರ್ವಭಾವಿ ಸಭೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ‌ ಬಿ.ಪಿ.ದಿನೇಶ್ ಕುಮಾರ್ ಉದ್ಘಾಟಿಸಿದರು
ಕುಶಾಲನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಪೂರ್ವಭಾವಿ ಸಭೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ‌ ಬಿ.ಪಿ.ದಿನೇಶ್ ಕುಮಾರ್ ಉದ್ಘಾಟಿಸಿದರು   

ಕುಶಾಲನಗರ: ಜನಸ್ನೇಹಿ ಪೊಲೀಸ್ ವ್ಯವಸ್ಥೆಯೊಂದಿಗೆ ಜನರೊಂದಿಗೆ ಪೊಲೀಸರು ಹೆಚ್ಚು ಬೆರೆಯಬೇಕು ಎನ್ನುವ ಉದ್ದೇಶದಿಂದ ಗ್ರಾಮಗಸ್ತು ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಹೇಳಿದರು.

ಕೊಡಗು ಜಿಲ್ಲಾ ಪೊಲೀಸ್, ಕುಶಾಲನಗರ ಟೌನ್ ಪೊಲೀಸ್ ಠಾಣೆ ವತಿಯಿಂದ ಇಲ್ಲಿನ ಬಿಜಿಟಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನೆ ಹಾಗೂ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಜನರ ಸಮಸ್ಯೆಗಳನ್ನು ಅರಿತು ಪರಿಹಾರ ಕಲ್ಪಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ನಿಗದಿತ ಸಂಖ್ಯೆಯ ಮನೆಗಳ ಸಮೂಹ ರಚನೆ, ಮುಖ್ಯಸ್ಥರ ನೇಮಕ, ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದರು.

ADVERTISEMENT

‘ಅತ್ಯುತ್ತಮ ಪೊಲೀಸ್ ಸಲಹೆಗಾರರು, ಪೊಲೀಸ್ ಸ್ನೇಹಿತರನ್ನು ಗುರುತಿಸಿ ಗೌರವಿಸಲಾಗುವುದು. ಅಪರಾಧರಹಿತ, ಸುಧಾರಿತ ಸಮಾಜ ನಿರ್ಮಾಣ, ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಾರ್ವಜನಿಕರ ಬೆಂಬಲ ಅತ್ಯಗತ್ಯ’ ಎಂದರು.

‘ಗಣೇಶೋತ್ಸವ ಸಂದರ್ಭ ಇಲಾಖೆಗಳ ನಿಯಮಗಳನ್ನು ಪಾಲಿಸಿ ಸಮಾಜದಲ್ಲಿ ಶಾಂತಿ ಭಂಗ ಉಂಟಾಗದ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಉತ್ಸವ ಆಚರಣೆಗೆ ಸಲಹೆ ನೀಡಿದರು.

‘ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಪಿ.ಚಂದ್ರಶೇಖರ್ ಮಾತನಾಡಿ, ‘ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಉಪಯುಕ್ತ ಮಾಹಿತಿಗಳು ಇಲಾಖೆಗೆ ಅಗತ್ಯವಿದೆ. ಸುಧಾರಿತ ಗ್ರಾಮಗಸ್ತು, ಪೊಲೀಸರು– ಸಾರ್ವಜನಿಕರ ನಡುವೆ ಬಾಂಧವ್ಯ ವೃದ್ದಿಸುವ ನಿಟ್ಟಿನಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕುಶಾಲನಗರ ಸರ್ಕಲ್ ಇನ್‌ಸ್ಪೆಕ್ಟರ್‌ ಬಿ.ಎಸ್. ದಿನೇಶ್ ಕುಮಾರ್, ಸೋಮವಾರಪೇಟೆ ಪಿಎಸ್‌ಐ ಮುದ್ದು ಮಹದೇವ, ಶನಿವಾರಸಂತೆಯ ಪಿಎಸ್‌ಐ ಕೃಷ್ಣರಾಜು, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಪಾಲ್ಗೊಂಡಿದ್ದರು.

ಗಣೇಶೋತ್ಸವ: ಪೊಲೀಸರೊಂದಿಗೆ ಸಹಕರಿಸಿ

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ 250-300 ಕಡೆಗಳಲ್ಲಿ ಗಣೇಶೋತ್ಸವ ನಡೆಯಲಿದ್ದು ಈ ಉತ್ಸವ ಸುಲಲಿತವಾಗಿ ಜರುಗಲು ಪೊಲೀಸರೊಂದಿಗೆ ಸಮಿತಿಯವರು ಸಾರ್ವಜನಿಕರು ಕೈಜೋಡಿಸಬೇಕು. ಗಣೇಶೋತ್ಸವ ವೇದಿಕೆಗಳಲ್ಲಿ ಕಡ್ಡಾಯವಾಗಿ ಒಂದಿಬ್ಬರ ವಾಸ್ತವ್ಯ ಮೆರವಣಿಗೆ ವೇದಿಕೆ ಕಾರ್ಯಕ್ರಮ ಸಂದರ್ಭ ಸಮಿತಿ ಸದಸ್ಯರು ಬಂದೋಬಸ್ತ್ ನಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕು. ವಿಸರ್ಜನೆ ಸಂದರ್ಭ ಅನಾಹುತ ಸಂಭವಿಸದಂತೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಡಿವೈಎಸ್‌ಪಿ ಚಂದ್ರಶೇಖರ್ ಸೂಚಿಸಿದರು.

ರಸ್ತೆ ಬದಿ ತ್ಯಾಜ್ಯ ಹಾಕುವುದು ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಬಯಲು ಬಸವೇಶ್ವರ ದೇವಾಲಯ ಸಮಿತಿಯಿಂದ ಹಾರಂಗಿ ರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಉದ್ದೇಶವಿದೆ
-ಸುದೀಪ್ ಕುಮಾರ್, ಉದ್ಯಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.