ಸಿದ್ದಾಪುರ: ಕರಡಿಗೋಡು ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಮಂಗಳವಾರ ನಡೆಯಿತು.
ಸೋಮವಾರ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅರಣ್ಯ ಇಲಾಖೆಯಿಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಕೈಗೊಂಡಿತ್ತು. ಮಳೆಯ ನಡುವೆ ಸಿಬ್ಬಂದಿ ಕಾಡಾನೆಗಳ ಚಲನವಲನ ಗುರುತಿಸಿರು. ಈ ವೇಳೆ 9 ಕಾಡಾನೆಗಳು ಕಂಡುಬಂದಿದ್ದು, ಪಟಾಕಿ ಸಿಡಿಸಿ ಓಡಿಸಲು ಯತ್ನಿಸಿದರು.
‘ಆನೆಗಳು ತೋಟದಿಂದ ತೋಟಕ್ಕೆ ತೆರಳುತ್ತಿದ್ದು, ಅರಣ್ಯಕ್ಕೆ ತೆರಳಲು ಹಿಂದೇಟು ಹಾಕುತ್ತಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆನೆ ಕಾರ್ಯಪಡೆ, ಆರ್.ಆರ್.ಟಿ ಸಿಬ್ಬಂದಿ ಭಾಗವಹಿಸಿದ್ದರು.
Cut-off box - ಇಂಜಲಗರೆಯಲ್ಲಿ ಹುಲಿ ಹೆಜ್ಜೆ ಗುರುತು ಕಾಡಾನೆ ಹಾವಳಿಯಿಂದ ಬೇಸತ್ತಿರುವ ಇಂಜಲಗರೆ ಗ್ರಾಮದಲ್ಲಿ ಹುಲಿಯ ಹೆಜ್ಜೆ ಗುರುತು ಕಾಣಿಸಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಪುಲಿಯೇರಿ ಇಂಜಲಗರೆ ಗ್ರಾಮದ ನಿವಾಸಿ ಮಂಡೇಪಂಡ ಪ್ರವೀಣ್ ಬೋಪಯ್ಯ ಅವರ ಕಾಫಿ ತೋಟದಲ್ಲಿ ಮಂಗಳವಾರ ಹುಲಿ ಹೆಜ್ಜೆ ಗುರುತು ಕಾಣಿಸಿದ್ದು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಸ್ಥಳಕ್ಕೆ ಪರಿಶೀಲಿಸಿದರು. ಇತ್ತೀಚೆಗೆ ಕರಡಿಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಹುಲಿ ಓಡಾಡುವ ವಿಡಿಯೊ ಸೆರೆ ಹಿಡಿದಿದ್ದರು. ಬೀಟಿಕಾಡು ಹಾಗೂ ಬಾಡಗ ಬಾಣಂಗಾಲ ಗ್ರಾಮದಲ್ಲೂ ಹುಲಿ ದಾಳಿಯಿಂದ ಜಾನುವಾರು ಸಾವನ್ನಪ್ಪಿತ್ತು. ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ‘ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಶಿವರಾಂ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.