ನಾಪೋಕ್ಲು: ‘ಮಕ್ಕಳ ಜ್ಞಾನಾರ್ಜನೆಗೆ ಅವಶ್ಯಕವಾದ ವಿಚಾರಗಳನ್ನು ಬಾಲ್ಯದಲ್ಲಿಯೇ ನೀಡಬೇಕು. ತಪ್ಪಿದಲ್ಲಿ ನಂತರದ ದಿನಗಳಲ್ಲಿ ನಾವು ಅಸಹಾಯಕರು ಅಗಬೇಕಾಗುತ್ತದೆ’ ಎಂದು ಕುಂಜಿಲ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಅಧ್ಯಕ್ಷ ಶಾಹಿದ್ ಅಲಿ ಹೇಳಿದರು.
ಸಮೀಪದ ಕುಂಜಿಲ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಕ - ಪೋಷಕರ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆತ್ತವರು ಶಾಲೆಗೆ ಮಕ್ಕಳನ್ನು ದಾಖಲಿಸಿ ಸುಮ್ಮನಾಗಬಾರದು. ಕರ್ತವ್ಯದ ಜೊತೆಗೆ ಮಕ್ಕಳ ಜವಾಬ್ದಾರಿ ವಹಿಸಿಕೊಂಡು ಅವರನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸಬೇಕು ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ.ಕವಿತಾ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅತ್ಯಗತ್ಯ ಎಂದರು.
2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊದಲ ಹಂತದಲ್ಲಿ 17 ವಿದ್ಯಾರ್ಥಿಗಳಲ್ಲಿ, 15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಎರಡನೇ ಹಂತದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಶಾಲೆಗೆ, ಊರಿಗೆ ಕೀರ್ತಿ ತಂದಿದ್ದಾರೆ ಎಂದರು.
10ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಅಫ್ರಾ ಫರ್ವೀನ್ಳನ್ನು ಅಭಿನಂದಿಸಲಾಯಿತು. ಶಾಲಾ ಸಿಬ್ಬಂದಿ ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.