ADVERTISEMENT

ವಿಶ್ವ ಏಡ್ಸ್ ದಿನ: ಮೋಂಬತ್ತಿ ಬೆಳಗಿ ಸಂದೇಶ

ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಳಕು ಹೊತ್ತಿಸಿದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 4:32 IST
Last Updated 2 ಡಿಸೆಂಬರ್ 2023, 4:32 IST
<div class="paragraphs"><p>ಮಡಿಕೇರಿಯಲ್ಲಿ ಶುಕ್ರವಾರ ನಡೆದ ವಿಶ್ವ ಏಡ್ಸ್ ದಿನದ ಕಾರ್ಯಕ್ರಮದಲ್ಲಿ ಸರ್ವರೂ ಮೋಂಬತ್ತಿ ಬೆಳಗಿದರು.&nbsp;</p></div>

ಮಡಿಕೇರಿಯಲ್ಲಿ ಶುಕ್ರವಾರ ನಡೆದ ವಿಶ್ವ ಏಡ್ಸ್ ದಿನದ ಕಾರ್ಯಕ್ರಮದಲ್ಲಿ ಸರ್ವರೂ ಮೋಂಬತ್ತಿ ಬೆಳಗಿದರು. 

   

ಮಡಿಕೇರಿ: ಎಚ್ಐವಿ ಪೀಡಿತರಿಗೆ ಬೆಳಕು ತೋರಲು ಹಾಗೂ ಏಡ್ಸ್‌ನಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸೂಚಿಸಲು ಇಲ್ಲಿ ಶುಕ್ರವಾರ ನಡೆದ ‘ವಿಶ್ವ ಏಡ್ಸ್ ದಿನದ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರೂ ಮೋಂಬತ್ತಿ ಬೆಳಗಿದರು.

ಕಾರ್ಯಕ್ರಮದಲ್ಲಿ ಸೇರಿದ್ದ ಸಭಿಕರಾದಿಯಾಗಿ ಎಲ್ಲರೂ ಮೋಂಬತ್ತಿ ಹಿಡಿದು ಎಚ್‌ಐವಿ, ಏಡ್ಸ್‌ ನಿರ್ಮೂಲನೆ ಮಾಡುವ ಪ್ರತಿಜ್ಞೆ ತೊಟ್ಟರು. ಎಚ್‌ಐವಿ ಪೀಡಿತರಿಗೆ ಬೆಳಕು ಇದೆ ಎಂದು ಸಾರುವ ಮೂಲಕ ಜಾಗೃತಿ ಮೂಡಿಸಲು ಯತ್ನಿಸಿದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ‘ಪ್ರತಿಯೊಬ್ಬ ನಾಗರಿಕರಿಗೂ ಎಚ್‍ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ತಿಳಿಸಿದರು.

ಅಸುರಕ್ಷಿತವಾಗಿ ಹಚ್ಚೆ ಹಾಕಿಸುವುದು, ರಕ್ತವನ್ನು ಪರೀಕ್ಷಿಸದೆ ಸ್ವೀಕಾರ ಮಾಡುವುದು, ಗರ್ಭಿಣಿಯರು ಎಚ್‍ಐವಿ ಪರೀಕ್ಷೆ ಮಾಡಿಸದೆ ಇರುವುದು, ಅಸುರಕ್ಷಿತ ಲೈಂಗಿಕ ಕ್ರಿಯೆಗೆ ಒಳಗಾಗುವುದು ಇವುಗಳಿಂದ ಎಚ್‍ಐವಿ ಸೋಂಕು ಹರಡುತ್ತದೆ ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳಾದ ಡಾ.ಎನ್.ಆನಂದ್ ಮಾತನಾಡಿ, ‘ಎಚ್‍ಐವಿಯನ್ನು ಅಂತ್ಯಗೊಳಿಸುವಲ್ಲಿ ಸಮುದಾಯಗಳು ನಾಯಕತ್ವದ ಪಾತ್ರವನ್ನು ಹೆಚ್ಚಾಗಿ ಮಾಡಬೇಕಾಗಿದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಾತನಾಡಿ, ‘ಕ್ರಮಬದ್ಧವಾದ ಜೀವನಶೈಲಿ ಇದ್ದರೆ ಎಚ್‍ಐವಿ ಸೋಂಕಿಗೆ ಒಳಗಾಗುವುದಿಲ್ಲ. ಆದ್ದರಿಂದ ಆರೋಗ್ಯಯುತವಾಗಿ ಸಮಾಜದಲ್ಲಿ ಬದುಕಲು ಸಂವಿಧಾನದಲ್ಲಿ ಹಕ್ಕಿದೆ. ಅದನ್ನು ಗಮನದಲ್ಲಿಟ್ಟುಕೊಂಡು ರಕ್ತ ಪರೀಕ್ಷೆ ಮಾಡಿಸಿಕೊಂಡು ಉತ್ತಮ ಆರೋಗ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ರೋಟರಿ ಸಂಸ್ಥೆಯ ಅಧ್ಯಕ್ಷೆ ಗೀತಾ ಗಿರೀಶ್ ಮಾತನಾಡಿ, ‘ಎಚ್‍ಐವಿ ಸೋಂಕನ್ನು ತಡೆಗಟ್ಟಲು ಸಮುದಾಯದಿಂದಲೇ ಸಾಧ್ಯ’ ಎಂದರು.

ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ‘ರೋಗವನ್ನು ಮರೆಯಬೇಕೆ ಹೊರತು ರೋಗಿಯನ್ನಲ್ಲ’ ಎಂದು ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ತಾಲೂಕು ಆರೋಗ್ಯ ಅಧಿಕಾರಿ‌ ಡಾ.ಚೇತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇದ್ದರು.

ಮಡಿಕೇರಿಯಲ್ಲಿ ಶುಕ್ರವಾರ ನಡೆದ ವಿಶ್ವ ಏಡ್ಸ್ ದಿನದ ಕಾರ್ಯಕ್ರಮದಲ್ಲಿ ಸರ್ವರು ಮೋಂಬತ್ತಿ ಬೆಳಗಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ- ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರದಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.