ಕೋಲಾರ: ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ನೇತೃತ್ವದಲ್ಲಿ ನೂರಾರು ಮಹಿಳೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಧರಣಿ ನಡೆಸಿದರು.
ಅಕುಶಲ ಕಾರ್ಮಿಕರಿಗೆ ಸಾಮಾನ್ಯ ಕನಿಷ್ಠ ಕೂಲಿ ರೂ.10 ಸಾವಿರ ನೀಡಬೇಕು. ಗುತ್ತಿಗೆ, ದಿನಗೂಲಿ ನೌಕರರಿಗೆ ಕೈಗಾರಿಕಾ ಕನಿಷ್ಠ ವೇತನ ಜಾರಿ, ಎ್ಲ್ಲಲ ಸರ್ಕಾರಿ ಇಲಾಖೆ, ಸಂಸ್ಥೆಗಳಲ್ಲಿ 10 ವರ್ಷ ಸೇವೆ ಪೂರೈಸಿರುವ ಗುತ್ತಿಗೆ, ದಿನಗೂಲಿ ನೌಕರರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಎಲ್ಲ ಅಸಂಘಟಿತ ರಂಗದ ಕಾರ್ಮಿಕರಿಗೂ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಗುರುತಿನ ಚೀಟಿಗಳನ್ನು ಕೂಡಲೇ ನೀಡಬೇಕು. ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನವನ್ನು ನೀಡಬೇಕು. ಜಿಲ್ಲೆಯ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ಸರ್ಕಾರದ ನಿಯಮದಂತೆ ಕನಿಷ್ಠ ವೇತನ ಮತ್ತು ಇತರ ಸೌಲಭ್ಯಗಳನ್ನು ಒದಗಿಸಬೇಕು.
ನಗರಸಭೆಯಲ್ಲಿ ಗುತ್ತಿಗೆ ಪೌರ ಕಾರ್ಮಿಕರ ಭವಿಷ್ಯ ನಿಧಿ ಹಣದಲ್ಲಿ ವಂಚನೆ ಮಾಡಿದ ಅಧಿ ಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಗಾಂಧಿ ನಾರಾಯಣಸ್ವಾಮಿ, ಉಪಾಧ್ಯಕ್ಷ ಅರ್ಜುನನ್. ಆನಂದರಾಜ್, ಕಾರ್ಯದರ್ಶಿ ಬಿ.ಎಸ್.ನಾಗರತ್ನ, ಮುಖಂಡರಾದ ಜಿ.ಈಶ್ವರಮ್ಮ, ಮುನಿರಾಜಮ್ಮ, ಹೊನ್ನೇನಹಳ್ಳಿ ಯಲ್ಲಪ್ಪ, ಬಿ.ವಿ.ಸಂಪಂಗಿ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.