ಕೋಲಾರ: ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರದ ನಚಿಕೇತ ವಿದ್ಯಾರ್ಥಿ ನಿಲಯದ ಕಾನೂನು ಕಾಲೇಜು ವಿದ್ಯಾರ್ಥಿಗಳು ತರಕಾರಿ, ಧಾನ್ಯ ಪ್ರದರ್ಶಿಸಿ ಶುಕ್ರವಾರ ಸಂಜೆ ನಿಲಯದ ಆವರಣದಲ್ಲಿ ಧರಣಿ ನಡೆಸಿ ಪ್ರತಿಭಟಿಸಿದರು.
ವಿದ್ಯಾರ್ಥಿಗಳಿಗೆ ಸರ್ಕಾರ ಲಕ್ಷಾಂತರ ರೂಪಾಯಿ ವಿನಿಯೋಗಿಸಿದರೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಆಹಾರ ಪೂರೈಸುತ್ತಿಲ್ಲ. ಸರಿಯಾದ ಸಮಯಕ್ಕೆ ಆಹಾರ ನೀಡುವುದಿಲ್ಲ. ಹಲವು ಬಾರಿ ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಬರಲೇಬೇಕು ಎಂದು ಆಗ್ರಹಿಸಿದರು.
ಹಲವು ಬಾರಿ ಪ್ರತಿಭಟನೆ ನಡೆಸಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.
ಕೋಲಾರ- ಬಂಗಾರಪೇಟೆ ರಸ್ತೆಯ್ಲ್ಲಲಿರುವ ನಿಲಯದ ಮುಖ್ಯ ಗೇಟಿನ ಮುಂದೆಯೇ ವಿದ್ಯಾರ್ಥಿಗಳು ಧರಣಿ ನಡೆಸಿದ್ದರಿಂದ ದಾರಿಹೋಕರಿಗೆ ಇದು ಕುತೂಹಲದ ವಿಷಯವಾಗಿತ್ತು. ಸಂಜೆ 5 ಗಂಟೆಯ ವೇಳೆಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು ರಾತ್ರಿ 8 ಗಂಟೆಯಾದರೂ ಧರಣಿ ಮುಂದುವರಿಸಿದ್ದರು.
ಆವರ ಆಹವಾಲು ಕೇಳಲು ಸಮಾಜ ಕಲ್ಯಾಣ ಇಲಾಖೆಯ ಯಾವ ಆಧಿಕಾರಿಯೂ ಬಂದಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.