ಕೋಲಾರ: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ 20 ಮಂದಿ ಉಮೇದುವಾರಿಕೆ ಸಲ್ಲಿಸಿದರು.
ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಶುಭ ದಿನವೆಂದು ಭಾವಿಸಿ ಉಮೇದುವಾರಿಕೆ ಸಲ್ಲಿಕೆಗೆ ಹೆಚ್ಚಿನ ಆಸಕ್ತಿ ತೋರಿದರು. ಹಿಂದಿನ ಮೂರು ದಿನಗಳಿಗೆ ಹೋಲಿಸಿದರೆ ಶುಕ್ರವಾರ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾದವು.
ಹಲವು ಅಭ್ಯರ್ಥಿಗಳು ದೇವಸ್ಥಾನಗಳು ಹಾಗೂ ಪ್ರಾರ್ಥನಾ ಮಂದಿರಗಳಿಗೆ ಭೇಟಿ ಕೊಟ್ಟು ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿದರು. ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಪರವಾಗಿ ಘೋಷಣೆ ಕೂಗುತ್ತಾ ರೋಡ್ ಶೋನಲ್ಲಿ ಹೆಜ್ಜೆ ಹಾಕಿದರು.
ಕೋಲಾರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸೈಯದ್ ಜಮೀರ್ ಪಾಷಾ, ಪಕ್ಷೇತರ ಅಭ್ಯರ್ಥಿಯಾಗಿ ಸುಧಾಕರ್ಗೌಡ, ಶಶಿಕುಮಾರ್ ನಾಮಪತ್ರ ಸಲ್ಲಿಸಿದರು. ಶ್ರೀನಿವಾಸಪುರ ಸಾಮಾನ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸತ್ಯ ಅರುಂಧತಿ, ಮಾಲೂರು ಸಾಮಾನ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಕೆ.ಎಸ್.ಮಂಜುನಾಥ್ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವೈ.ನಂಜೇಗೌಡ ಉಮೇದುವಾರಿಕೆ ಸಲ್ಲಿಸಿದರು.
ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ಬಾಬು, ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ನಾಮಪತ್ರ ಸಲ್ಲಿಸಿದರು. ಕೆಜಿಎಫ್ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅಶ್ವಿನಿ ಸಂಪಂಗಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ರೂಪಾ ಶಶಿಧರ್, ಸಿಪಿಎಂನಿಂದ ಪಿ.ತಂಗರಾಜು, ಆರ್ಪಿಐನಿಂದ ಮಾಜಿ ಶಾಸಕ ಎಸ್.ರಾಜೇಂದ್ರನ್, ಕರ್ನಾಟಕ ಜನತಾ ಪಕ್ಷದಿಂದ (ಕೆಜೆಪಿ) ಗಗನಾ ಸುಖನ್ಯಾ, ಕೆಪಿಜೆಪಿಯಿಂದ ಪಿ.ನಂದಿನಿ ಮತ್ತು ವಳ್ಳಲ್ ಮುನಿಸ್ವಾಮಿ ನಾಮಪತ್ರ ಸಲ್ಲಿಸಿದರು.
ಮುಳಬಾಗಿಲು ಮೀಸಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ವಿ.ಶ್ರೀನಿವಾಸ್, ಜಿ.ಶ್ರೀನಿವಾಸ್, ಟಿ.ವಿ.ಬಾಲಕೃಷ್ಣ, ವಿ.ವೆಂಕಟೇಶಪ್ಪ, ಡಿ.ವೆಂಕಟರವಣಪ್ಪ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾಧಿಕಾರಿ ಕಚೇರಿಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನಾಮಪತ್ರ ಸಲ್ಲಿಕೆಗೆ ಏ.24 ಕೊನೆಯ ದಿನವಾಗಿದ್ದು, ಸೋಮವಾರ (ಏ.23) ಹೆಚ್ಚಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.