ADVERTISEMENT

ಗಡಿಭವನ: ಕಾಲಮಿತಿ ನಿಗದಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 4:10 IST
Last Updated 2 ಅಕ್ಟೋಬರ್ 2012, 4:10 IST

ಮುಳಬಾಗಲು: ಪಟ್ಟಣದ ಡಿವಿಜಿ ರಂಗಮಂದಿರದ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರೂ 45 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಗಡಿಭವನ ಕಾಮಗಾರಿಯನ್ನು ಜಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎನ್.ಶ್ರೀನಿವಾಸಚಾರಿ ಶುಕ್ರವಾರ ಪರಿಶೀಲಿಸಿ, ಎರಡು ತಿಂಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


ಗಡಿಭವನ ಮುಂಭಾಗದಲ್ಲಿ ಡಿವಿಜಿ ಪ್ರತಿಮೆ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ತಿಳಿಸಿದರು. ಇದಕ್ಕೆ ಸಮ್ಮತಿ ನೀಡಿದ ಕಾರ್ಯದರ್ಶಿಗಳು ಗಡಿ ಭವನದ ಸುತ್ತಲು ಕಾಂಪೌಂಡ್ ನಿರ್ಮಿಸುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಮಾಡಬಾರದು ಎಂದರು.

ಗಡಿಭವನದ ಮೊದಲನೇ ಅಂತಸ್ತು ನಿರ್ಮಾಣ ಮತ್ತು ಡಿವಿಜಿ ರಂಗಮಂದಿರ ದುರಸ್ಥಿಗೆ ರೂ 60 ಲಕ್ಷ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿರುವ ಬಗ್ಗೆ ಮಾಹಿತಿ ಪಡೆದರು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ನುಡಿದರು.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಇದೆ. ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸ್ವಚ್ಛತೆಯ ಕೊರತೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ ಎಂದು ಸಾರ್ವಜನಿಕರು ದೂರಿದರು. ಈ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಭರವಸೆ ನೀಡಿದರು.

ತಹಶೀಲ್ದಾರ್ ನಂಜಯ್ಯ, ನಿಕಟಪೂರ್ವ ಕಸಾಪ ಅಧ್ಯಕ್ಷ ಕನ್ನಡಭಟ ವೆಂಕಟಪ್ಪ, ಕಂದಾಯ ನಿರೀಕ್ಷಕ ವೆಂಕಟೇಶ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT