ADVERTISEMENT

ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 1 ಮೇ 2012, 4:35 IST
Last Updated 1 ಮೇ 2012, 4:35 IST

ಶ್ರೀನಿವಾಸಪುರ:  ಮನೆಗಳಿಗೆ ಮಳೆ ನೀರು ನುಗ್ಗದಂತೆ ವ್ಯವಸ್ಥೆ ಮಾಡಬೇಕು ಮತ್ತು ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಸಂತೆ ಮೈದಾನದ ನಿವಾಸಿಗಳು ಸೋಮವಾರ ಪುರಸಭಾ ಕಚೇರಿ ಎದುರು ಧರಣಿ ನಡೆಸಿದರು.

`ಶಾಸಕರು ಸೇರಿದಂತೆ ಎಲ್ಲ ಅಧಿಕಾರಿಗಳೂ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಆದರೆ ಸಮಸ್ಯೆ ಮಾತ್ರ ಮುಂದುವರಿದಿದೆ. ಪುರಸಭೆಯ ನಿರ್ಲಕ್ಷ್ಯದಿಂದ, ಬಡವರು ಮಳೆಗಾಲದಲ್ಲಿ ಮನೆ ತೊರೆಯಬೇಕಾದ ಪರಿಸ್ಥಿತಿ ಬಂದಿದೆ. ಭಾನುವಾರ ಸಂಜೆ ಸುರಿದ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸಿದರು. ನೀರು ಹೊರಗೆ ಹರಿದು ಹೋಗುವ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಗೆ ಕಾರಣವಾಗಿದೆ~ ಎಂದು ಪ್ರತಿಭಟನಾಕಾರರು ನೊಂದು ನುಡಿದರು.

`ವ್ಯವಸ್ಥಿತವಾಗಿ ಚರಂಡಿ ನಿರ್ಮಿಸಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಿದಲ್ಲಿ ನಿವಾಸಿಗಳು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಕೂಡಲೇ ಪುರಸಭೆ ಎಸ್‌ಎಫ್‌ಸಿ ಅನುದಾನದಲ್ಲಿ ಚರಂಡಿ ನಿರ್ಮಿಸಬೇಕು~ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಪ್ರಕಾಶ್ ಆಗ್ರಹಿಸಿದರು.

`ಸಂತೆ ಮೈದಾನದ ನಿವಾಸಿಗಳು ಹಲವು ವರ್ಷಗಳಿಂದ ಮಳೆ ಬಂದಾಗ ತೊಂದರೆ ಅನುಭವಿಸುತ್ತಿದ್ದಾರೆ. ಮಳೆ ಬಂದಿತೆಂದರೆ ನೀರು ಮನೆಗಳಿಗೆ ನುಗ್ಗುತ್ತದೆ. ಮನೆ ಮಂದಿ ಬೀದಿಗೆ ಬೀಳುತ್ತಾರೆ. ಪರಿಸ್ಥಿತಿ ಹೀಗಿದ್ದರೂ ಪುರಸಭೆ ಅಲ್ಲಿನ ಸಮಸ್ಯೆ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿಲ್ಲ~ ಎಂದು ಆರೋಪಿಸಿದರು.

ಮನವಿ ಪತ್ರ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ಕೆ.ಜಗದೀಶ್ ಮಾತನಾಡಿ, ಪುರಸಭೆಗೆ ಅಲ್ಲಿನ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಯ ಅರಿವಿದೆ. ಮುಂದಿನ ಎರಡು ತಿಂಗಳಲ್ಲಿ ಚರಂಡಿಯನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಆನಂತರ ಧರಣಿ ಹಿಂಪಡೆಯಲಾಯಿತು.

ಪುರಸಭಾ ಸದಸ್ಯರಾದ ರಾಜೇಂದ್ರ ಪ್ರಸಾದ್, ಬಿ.ಶ್ರೀನಿವಾಸರೆಡ್ಡಿ ಪ್ರತಿಭಟನೆಯ ನೇತೃತ್ವ ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.