ADVERTISEMENT

ಚಿಕ್ಕ ತಿರುಪತಿ: ಮೂಲ ಸೌಲಭ್ಯಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 9:25 IST
Last Updated 7 ಜುಲೈ 2012, 9:25 IST

ಮಾಲೂರು: ತಾಲ್ಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇಗುಲಕ್ಕೆ ಧಾರ್ಮಿಕ ದತ್ತಿ ಇಲಾಖೆಯಿಂದ ಮೂಲ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ನಂದಕುಮಾರ್ ಹೇಳಿದರು.

ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇಗುಲಕ್ಕೆ ಈಚೆಗೆ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ, ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಚರ್ಚೆ ನಡೆಸಿದರು.

ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ರಾಜ್ಯದ ನಾನಾ ಭಾಗಗಳು ಸೇರಿದಂತೆ ತಮಿಳುನಾಡು, ಆಂಧ್ರ ಪ್ರದೇಶದಿಂದ ಹೆಚ್ಚಿನ ಸಂಖ್ಯೆ ಭಕ್ತರು ಆಗಮಿಸುತ್ತಾರೆ. ಶೌಚಾಲಯ, ವಸತಿ ಸೌಕರ್ಯ, ಕುಡಿಯುವ ನೀರು, ಸ್ನಾನದ ವ್ಯವಸ್ಥೆಗೆ ಸಮಸ್ಯೆಯಾಗಿದೆ. ಜಮೀನು ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ದೇವಾಲಯ ಅಭಿವೃದ್ಧಿ ಸಾಧ್ಯವಾಗಿಲ್ಲ.

ಜುಲೈ 20ರಂದು ಶ್ರಾವಣ ಮಾಸ ಆರಂಭವಾಗುತ್ತಿದ್ದು, ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆ ಭಕ್ತಾದಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ಮೂಲಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.
ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ, ನಗರ ನೀರು ಸರಬರಾಜು ಮಂಡಳಿ ಕಾರ್ಯದರ್ಶಿ ರಾಘವೇಂದ್ರ, ತಹಶೀಲ್ದಾರ್ ಎಚ್.ಅಮರೇಶ್, ಜಿಲ್ಲಾ ಮುಜರಾಯಿ ತಹಶೀಲ್ದಾರ್ ನಂಜೇಗೌಡ, ದೇವಾಲಯದ ಪ್ರಧಾನ ಅರ್ಚಕ ನರಸಿಂಹಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ  ಎನ್.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

ನೌಕರರ ಸಭೆ ಇಂದು
ಮುಳಬಾಗಲು: ಕೋಲಾರ ಜಿಲ್ಲಾ ಅನುದಾನಿತ ಶಾಲೆಗಳ ನೌಕರರ ಸಂಘದ ವತಿಯಿಂದ ಪಟ್ಟಣದ ಅಮರಜ್ಯೋತಿ ಶಾಲೆ ಆವರಣದಲ್ಲಿ ಜುಲೈ 7ರ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ತಾಲ್ಲೂಕು ಅನುದಾನಿತ ಶಾಲೆ ನೌಕರರ ಸಭೆ ನಡೆಯಲಿದೆ ಎಂದು ಜಿಲ್ಲಾ ಸಂಘದ ಅಧ್ಯಕ್ಷ ಎನ್.ರವೀಂದ್ರನಾಥ್ ಮತ್ತು ಕಾರ್ಯದರ್ಶಿ ಕೃಷ್ಣರೆಡ್ಡಿ ತಿಳಿಸಿದ್ದಾರೆ.ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಯ ಎಲ್ಲ ನೌಕರರು ಭಾಗವಹಿಸ ಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.