ಮುಳಬಾಗಲು: ತಾಲ್ಲೂಕಿನ ದೇವರಾಯ ಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ಮರಳು ಲಾರಿ ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ ನಡೆದ ಘಟನೆ ಗುರುವಾರ ಸಂಜೆ ನಡೆದಿದೆ.
ತಾಲ್ಲೂಕಿನ ಹನುಮನಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ ಮುನೇಶ್ ಕೋಲಾರದ ಕಡೆ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ್ನು ತಡೆದಿದ್ದಾರೆ. ಈ ಸಂದರ್ಭ ರಾಧಾಕೃಷ್ಣ ಎಂಬಾತ ಹಲ್ಲೆ ನಡೆಸಿದ ಎಂದು ಅವರು ಆರೋಪಿಸಿದ್ದಾರೆ.
ಹಲ್ಲೆ ನಡೆದ ಬಗ್ಗೆ ಜಿಲ್ಲಾಧಿಕಾರಿಗೆ ಮುನೇಶ್ ವರದಿ ಮಾಡಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಕುಮಾರ್, ತಹಶೀಲ್ದಾರ್ ಡಿ.ವಿ.ರಾಮಮೂರ್ತಿ ಲ್ಯಾಂಕೋ ಮರಳು ತಪಾಸಣಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿನ ದೃಶ್ಯಾವಳಿ ವೀಕ್ಷಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಕ್ಷಣೆಗೆ ಮನವಿ: ಗ್ರಾಮ ಲೆಕ್ಕಾಧಿಕಾರಿ ಸಿ.ವಿ.ಮುನೇಶ್ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಸಂಘ, ತಾಲ್ಲೂಕು ಗ್ರಾಮಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ವಿಜಯಕುಮಾರ್, ಖಜಾಂಚಿ ಸುಬ್ರಮಣ್ಯಂ, ಕಾರ್ಯದರ್ಶಿ ಬಲರಾಮೇಗೌಡ, ಅರವಿಂದ್, ಸುಧಾಕರ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.