ADVERTISEMENT

ಡಿಡಿಪಿಐ ಕಚೇರಿ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2017, 10:49 IST
Last Updated 11 ಏಪ್ರಿಲ್ 2017, 10:49 IST
ಡಿಡಿಪಿಐ ಕಚೇರಿ ಎದುರು ಧರಣಿ
ಡಿಡಿಪಿಐ ಕಚೇರಿ ಎದುರು ಧರಣಿ   

ಕೋಲಾರ: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಅರ್ಜಿ ಸಲ್ಲಿಸಲು ವಿಧಿಸಿರುವ ನಿರ್ಬಂಧಗಳನ್ನು ಸರ್ಕಾರ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ (ಡಿಡಿಪಿಐ) ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಿದರು.

ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಸರ್ಕಾರ  ವಿಧಿಸಿರುವ ನಿರ್ಬಂಧದಿಂದ  ಗ್ರಾಮೀಣ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಕಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ‘ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗುವಂತೆ ಆರ್‌ಟಿಇ ನಿಯಮಗಳನ್ನು ರೂಪಿಸಿದೆ. ಮೇಲ್ನೋ ಟಕ್ಕೆ ಬಡ ಪೋಷಕರ ಪರವಾಗಿ ಇರು ವಂತೆ ನಡೆದುಕೊಳ್ಳುವ ಸರ್ಕಾರ ಪರೋ ಕ್ಷವಾಗಿ ಖಾಸಗಿ ಸಂಸ್ಥೆಗಳ ಹಿತರಕ್ಷಣೆ ಮಾಡುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕಾರಣ ಗ್ರಾಮೀಣ ವಿದ್ಯಾರ್ಥಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ಬಡ ಮಕ್ಕಳಿಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಕಲ್ಪಿಸಲು ಆರ್‌ಟಿಇ ಜಾರಿಗೊಳಿಸಿದೆ. ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಮೀಸಲಿರಿಸಿದೆ. ಆದರೆ, ಗ್ರಾಮೀಣ ಮಕ್ಕಳು ಆರ್‌ಟಿಇ ಅಡಿ ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ಅವರಿಗೆ ಪ್ರವೇಶ ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದರು.

‘ಬಡ ಮತ್ತು ಗ್ರಾಮೀಣ ಮಕ್ಕಳ ಹಿತದೃಷ್ಟಿಯಿಂದ ಆರ್‌ಟಿಇ ನಿಯಮಾವಳಿಯನ್ನು ಸರಳಗೊಳಿಸ ಬೇಕು. ಮುಚ್ಚುವ ಹಂತದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಕೆ.ಶ್ರೀನಿವಾಸ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ನಳಿನಿ, ಸದಸ್ಯರಾದ ಉಮಾಗೌಡ, ವೆಂಕಟೇಶ್, ರಾಮುಶಿವಣ್ಣ, ಮಂಜುನಾಥ್‌, ಅಮರ ನಾರಾಯಣ, ಕೃಷ್ಣೇಗೌಡ, ಆಂಜಿನಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.