ಕೋಲಾರ: ಪದವಿ ಪರೀಕ್ಷೆಗೆ ವಿತರಿಸುತ್ತಿರುವ ಪ್ರವೇಶ ಪತ್ರದಲ್ಲಿ ಸಾಕಷ್ಟು ತಪ್ಪುಗಳು ಬಂದಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು.
ಅ.12 ರಿಂದ ಆರಂಭವಾಗುವ 1,3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗೆ ಸೋಮವಾರ ಪ್ರವೇಶ ಪತ್ರ ವಿತರಿಸಲಾಗಿದೆ. ಕೆಲವರ ಹೆಸರು ಅದಲು ಬದಲಾಗಿದೆ. ಭಾವಚಿತ್ರಗಳು ಸಹ ಬೇರೆಯಾಗಿವೆ. ಇನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆ ದಿನಾಂಕ ನಮೂದಿಸಿಲ್ಲವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಪ್ರತಿಭಟನೆ ನಡೆಸಿದ ಯುವ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು, ನೂರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ವಿ.ವಿ. ಸಿಬ್ಬಂದಿ ಚೆಲ್ಲಾಟ ಆಡುತ್ತಿದ್ದಾರೆ ಎಂದು ದೂರಿದರು.
ಆನ್ಲೈನ್ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರ ನೋಂದಣಿಯಾಗುತ್ತಿದೆ. ಇಂತಹ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಬದ್ಧತೆ ತಿಳಿಯದೆ ಗುತ್ತಿಗೆ ನೀಡಿದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಮಾತನಾಡಿದ ಪ್ರಾಂಶುಪಾಲ ವೆಂಕಟರಾಮರೆಡ್ಡಿ, ಸಮಸ್ಯೆ ಕುರಿತು ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದಾಗ ಪ್ರತಿಭಟನೆ ಹಿಂಪಡೆ ಯಲಾಯಿತು. ಹೂವಳ್ಳಿ ನಾಗರಾಜ್, ಅಂಬರೀಷ್, ಪ್ರಜ್ವಲ್, ಬಸವ, ಪ್ರದೀಪ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.