ADVERTISEMENT

ಪ್ಲಾಸ್ಟಿಕ್ ಧ್ವಜ ಬಳಕೆಗೆ ನಿಷೇಧ

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 8:55 IST
Last Updated 20 ಜನವರಿ 2011, 8:55 IST

ಕೆಜಿಎಫ್: ಮುಂಬರುವ ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದ್ದು, ಅವುಗಳನ್ನು ಮಾರುವವರಿಗೆ ಹತ್ತು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಮತ್ತು ತಹಶೀಲ್ದಾರ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.ರಾಬರ್ಟಸನ್‌ಪೇಟೆ ನಗರಸಭೆ ಆವರಣದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜದ ಗೌರವಕ್ಕೆ ಕುಂದು ಬರದಂತೆ ಸಮಾರಂಭವನ್ನು ಆಚರಿಸಬೇಕು. ವಿದ್ಯಾರ್ಥಿಗಳ ಜೊತೆ ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಮಾರಂಭ ಆಕರ್ಷಣೀಯವಾಗಿರುವಂತೆ ನೋಡಿಕೊಳ್ಳಬೇಕು ಎಂದರು.

ಗಣರಾಜ್ಯೋತ್ಸವ ಅದ್ದೂರಿಯಾಗಿ ನಡೆಯಲು ಅಧಿಕಾರಿಗಳು ಶ್ರಮ ವಹಿಸಬೇಕು. ಯಾವುದೇ ಅಧಿಕಾರಿ ಸಹ ಕಾರ್ಯಕ್ರಮಕ್ಕೆ ಗೈರು ಹಾಜರಾಗಬಾರದು ಎಂದು ನಗರಸಭೆ ಅಧ್ಯಕ್ಷ ದಯಾನಂದ ಹೇಳಿದರು.ಅಧಿಕೃತ ಸಮಾರಂಭ ಮುಗಿದ ನಂತರ ನಗರಸಭೆಯಲ್ಲಿ ನಗರದ ಸಮಾಜ ಸೇವಕರು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲಾಗುವುದು ಎಂದು ನಗರಸಭೆ ಉಪಾಧ್ಯಕ್ಷ ಎಂ.ಭಕ್ತವತ್ಸಲಂ ಹೇಳಿದರು. ಸಮಾರಂಭದಲ್ಲಿ ಸಾಧನೆ ಮಾಡಿದ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಡಿವೈಎಸ್ಪಿ. ಕೆ.ಶೇಷಾದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ನಗರಸಭೆ ಆಯುಕ್ತ ಭೀಮನೇಡಿ, ಸರ್ಕಲ್ ಇನ್ಸ್‌ಪೆಕ್ಟರ್ ರಮೇಶ್, ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಘುನಾಥಶೆಟ್ಟಿ, ರವೀಂದ್ರ, ವ್ಯವಸ್ಥಾಪಕ ಶ್ರೀಕಾಂತ್ ಸಭೆಯಲ್ಲಿ ಭಾಗವಹಿಸಿದ್ದರು.ಅಶ್ವಥ್ ಸ್ವಾಗತಿಸಿದರು. ಎನ್.ಆರ್.ಪುರುಷೋತ್ತಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.