ADVERTISEMENT

ಬಿಬಿಎಂಪಿ ಕಸ ವಿಲೇವಾರಿ: ವಿರೋಧ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 5:50 IST
Last Updated 3 ಅಕ್ಟೋಬರ್ 2012, 5:50 IST

ಕೋಲಾರ: ಬಿಬಿಎಂಪಿ ಲಾರಿಗಳನ್ನು ಯಾವುದೇ ಕಾರಣಕ್ಕೂ ತಾಲ್ಲೂಕಿನಲ್ಲಿ ಕಸ ವಿಲೇವಾರಿ ಮಾಡಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಶ್ರೀನಿವಾಸಗೌಡ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯು ತಾಲ್ಲೂಕಿನ ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಾಪುರ, ಜಂಬಾಪುರ, ಮಾಗೇನಹಳ್ಳಿ, ಕದರೀಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಚಿಂತನೆ ನಡೆಸಿದೆ. ಈ ಬಗ್ಗೆ ಈಗಾಗಲೇ ಚಿಂತಾಮಣಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಲಾರ ತಾಲ್ಲೂಕಿನಲ್ಲೂ ಕಸ ವಿಲೇವಾರಿಗೆ ಅವಕಾಶ ನೀಡುವುದಿಲ್ಲ ಎಂದರು.

ಶ್ರೀನಿವಾಸಗೌಡರ ಜೊತೆಗಿದ್ದ ಮುಖಂಡರಾದ ನಾಗನಾಳ ಸೋಮಣ್ಣ, ಸಿ.ಮುನಿಯಪ್ಪ, ಅನ್ವರ್‌ಪಾಷಾ, ಚೆನ್ನವೀರಯ್ಯ ಕೂಡ ಕಸ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿದರು. ಕಸ ವಿಲೇವಾರಿಗೆ ಯಾವುದೇ ಬಿಬಿಎಂಪಿ ವಾಹನಗಳನ್ನು ತಾಲ್ಲೂಕಿನೊಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದರು.

ಕಸವನ್ನು ಬೆಂಗಳೂರಿನಲ್ಲಿ, ವರ್ತೂರಲ್ಲಿ ವಿಲೇವಾರಿ ಮಾಡಲಿ. ಆದರೆ ಕೋಲಾರ ತಾಲ್ಲೂಕಿನಲ್ಲಿ ಹಾಕುವುದು ಬೇಡ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ  ಕಸ ವಿಲೇವಾರಿ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಅಧ್ಯಕ್ಷ ಸ್ಥಾನ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಬೆಂಬಲವನ್ನು ಕೋರಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪನವರನ್ನು ಸಂಪರ್ಕಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರೇ ಹೇಳುತ್ತಾರೆ ಎಂದು ಗೌಡರು ನುಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.