ADVERTISEMENT

ರೂ 29 ಲಕ್ಷ ಅವ್ಯವಹಾರ: ಸಿಮೋಲ್ ಆರೋಪ

​ಪ್ರಜಾವಾಣಿ ವಾರ್ತೆ
Published 10 ಜನವರಿ 2014, 6:27 IST
Last Updated 10 ಜನವರಿ 2014, 6:27 IST

ಕೋಲಾರ: ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಕೆರೆ ಅಂಗಳದಲ್ಲಿ ಗಿಡ ನೆಡುವ ಯೋಜನೆಯಲ್ಲಿ ₨ 29 ಲಕ್ಷ ಅವ್ಯವಹಾರವಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯೆ ಸಿಮೋಲ್ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದ ಘಟನೆ ಗುರುವಾರ ನಡೆಯಿತು.

ತಾವು ಪ್ರತಿನಿಧಿಸುವ ಕ್ಷೇತ್ರದ ಘಟ್ಟಮಾದಮಂಗಲ ಸುತ್ತಮುತ್ತಲಿನ ಐದು ಗ್ರಾಮಗಳ ಕೆರೆಗಳಲ್ಲಿ ಮಳೆಗಾಲದಲ್ಲಿ ಗಿಡ ನೆಡುವ ಬದಲು ಕಳೆದ ನವೆಂಬರ್–ಡಿಸೆಂಬರ್‌ನಲ್ಲಿ ಗಿಡಗಳನ್ನು ನೆಡುವ ಪ್ರಯತ್ನ ಅಪೂರ್ಣವಾಗಿ ನಡೆದಿದೆ. ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರ್ಯಕ್ರಮ ಅನುಷ್ಠಾನದಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಗಿಡಗಳ ನೆಡುವಿಕೆ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಗಿಡಗಳನ್ನು ನೆಡದೆ ಬಿಸಾಡಲಾಗಿದೆ. ಉದ್ಯೋಗಖಾತ್ರಿ ಯೋಜನೆಯಡಿ ಯಂತ್ರವಾಹನ ಬಳಸುವಂತಿಲ್ಲ. ಆದರೂ ಬಳಸಿ ಗಿಡಗಳನ್ನು ನೆಡಲಾಗಿದೆ. ಹೀಗಾಗಿ ಹಣ ಬಿಡುಗಡೆ ತಡೆಹಿಡಿಯಬೇಕು ಎಂದು ಗ್ರಾಮಸ್ಥರು ಖಾತ್ರಿ ಯೋಜನೆಯ ಓಂಬುಡ್ಸ್‌ಮನ್‌ಗೆ ದೂರು ಸಲ್ಲಿಸಿದ್ದಾರೆ. ದೂರಿನ ಅನ್ವಯ ಹಣ ಬಿಡುಗಡೆಗೆ ತಡೆ ಒಡ್ಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿಯು, ಸರಿಯಾದ ಸಮಯಕ್ಕೆ ಗಿಡಗಳನ್ನು ಗ್ರಾಮ ಪಂಚಾಯಿತಿಗೆ ಪೂರೈಸಲಾಗಿದೆ. ಪಂಚಾಯಿತಿಯವರು ತಡವಾಗಿ ನೆಡುವ ಕೆಲಸ ಮಾಡಿದರೆ ಇಲಾಖೆಯ ಜವಾಬ್ದಾರಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಷಯದ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ. ಅಧ್ಯಕ್ಷ ಆರ್.ನಾರಾಯಣಸ್ವಾಮಿ ಭರವಸೆ ನೀಡಿದ ಬಳಿಕ ಚರ್ಚೆ ಕೊನೆಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.