ಕೋಲಾರ: 2009-10ನೇ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಕೋರಿ ಡೇ ಸೆಮಿಸ್ಟರ್ ವಿದ್ಯಾರ್ಥಿಗಳು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ರಾಜೇಂದ್ರ ಚೋಳನ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮೂರು ವರ್ಷದ ಹಿಂದೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ; ಇದುವರೆಗೂ ವಿದ್ಯಾರ್ಥಿ ವೇತನ ನೀಡಿಲ್ಲ. ಈ ಕುರಿತು ಹಲವು ಬಾರಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ವಿದ್ಯಾರ್ಥಿ ವೇತನ ವಿತರಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ ಬಳಿಕ ನೀಡಿರುವ ಮಾಹಿತಿಯಲ್ಲಿ ವೇತನ ವಿತರಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ ಯಾರೊಬ್ಬರಿಗೂ ವಿದ್ಯಾರ್ಥಿ ವೇತನ ತಲುಪಿಲ್ಲ ಎಂದು ಆರೋಪಿಸಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಪಿ.ರಾಜೇಂದ್ರ ಚೋಳನ್, ವಿದ್ಯಾರ್ಥಿ ವೇತನವನ್ನು ಸಕಾಲದಲ್ಲಿ ವಿತರಿಸದ ಪರಿಣಾಮ ಅನುದಾನ ಸರ್ಕಾರಕ್ಕೆ ವಾಪಸ್ ಹೋಗಿತ್ತು. ಇದೀಗ ಅನುದಾನ ಮತ್ತೆ ಬಿಡುಗಡೆಯಾಗಿದ್ದು, ಎಲ್ಲ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಸೂಚಿಸಲಾಗಿದೆ. ಅದಕ್ಕೆ 15-20 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದರು.
ನಿಗದಿತ ಅವಧಿಯೊಳಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿದ್ದಲ್ಲಿ ತಾಲ್ಲೂಕಿನ ಎಲ್ಲ ಕಾಲೇಜು ವಿದ್ಯಾರ್ಥಿಗಳು ಸೇರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಧರಣಿ ನಡೆಸುವುದುಖಚಿತ ಎಂದು ಆದಿಮ ಶಕ್ತಿ ದಲಿತ ವಿದ್ಯಾರ್ಥಿ ಒಕ್ಕೂಟದ ಹೂಹಳ್ಳಿ ನಾಗರಾಜ್ ಹೇಳಿದರು. ಅದಕ್ಕೆ ಅವಕಾಶ ನೀಡದಂತೆ ವಿದ್ಯಾರ್ಥಿ ವೇತನ ವಿತರಿಸಲು ಕ್ರಮ ಕೈಗೊಳ್ಳುವುದು ತಮ್ಮ ಜವಾಬ್ದಾರಿ ಎಂದು ರಾಜೇಂದ್ರ ಚೋಳನ್ ತಿಳಿಸಿದರು.
ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಬಿ.ಮುನಿವೆಂಕಟಪ್ಪ, ವಿದ್ಯಾರ್ಥಿಗಳಾದ ಅವಿನ್ಕುಮಾರ್, ಜೀವನ್ ಸಕ್ಪಲ್, ರಾಜೇಶ್, ಚಂದ್ರಶೇಖರ್, ಸುನೀಲ್ ಕುಮಾರ್, ಪ್ರಜ್ವಲ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.