ಶ್ರೀನಿವಾಸಪುರ: ತಾಲ್ಲೂಕಿನ ವಿದ್ಯಾರ್ಥಿಗಳು ಏಕಲವ್ಯ ಶಾಲೆಯ ಪ್ರಯೋಜನ ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಪುಲಗೂರುಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನ್ನಗಾರಿಹಳ್ಳಿ ಗ್ರಾಮದ ಸಮೀಪ ಭಾನುವಾರ ₨ 14 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದಿಂದ ನಿರ್ಮಿಸಲು ಉದ್ದೇಶಿಸಲಾಗಿರುವ ಏಕಲವ್ಯ ವಸತಿ ಶಿಕ್ಷಣ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶೀಘ್ರವಾಗಿ ಟೆಂಡರ್ ಕರೆದು ಮೂರು ತಿಂಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಅರ್ಹ ರೈತರಿಗೆ ₨ 3 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಕೃಷಿಕರು, ಕೃಷಿ ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರ ಹಲ ಯೋಜನೆಗಳನ್ನು ಜಾರಿಗೆ ತಂದಿವೆ ಎಂದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ಗಡಿ ಭಾಗದ ಜನರ ಪಾಲಿಗೆ ಏಕಲವ್ಯ ವಸತಿ ಶಿಕ್ಷಣ ಶಾಲೆ ವರದಾನವಾಗಿದೆ. ಹಿಂದುಳಿದ ಪಂಗಡ, ಇತರ ವರ್ಗದ ವಿದ್ಯಾರ್ಥಿಗಳು ಇಲ್ಲಿ ದೊರೆಯುವ ಉತ್ತಮ ಶಿಕ್ಷಣದ ಅನುಕೂಲ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು.
ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ವಿಶೇಷ ಕಾಳಜಿ ವಹಿಸಿದ ಪರಿಣಾಮ ಶ್ರೀನಿವಾಸಪುರ ತಾಲ್ಲೂಕಿಗೆ ರೈಲು ಬೋಗಿ ಕಾರ್ಖಾನೆ ಮಂಜೂರಾಗಿದೆ. ಇದರಿಂದ ಇಲ್ಲಿನ ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಮಾ.5ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಹೇಳಿದರು.
ಮುಖಂಡರಾದ ಗೋವಿಂದಸ್ವಾಮಿ, ವಾಣಿ ಕೃಷ್ಣಾರೆಡ್ಡಿ, ಎಲ್.ಗೋಪಾಲಕೃಷ್ಣ, ವಿ.ವೆಂಕಟಮುನಿಯಪ್ಪ, ಅನಿಲ್ ಕುಮಾರ್, ಶೇಷಾಪುರ ಗೋಪಾಲ್, ಅಕ್ಬರ್ ಷರೀಫ್, ಮಾರುತಿ ರೆಡ್ಡಿ, ಬಿ.ಎಲ್.ರಾಮಣ್ಣ, ಜಿ.ರಾಜಣ್ಣ, ವೆಂಕಟಾದ್ರಿ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಳೆ: ಸಮಾರಂಭ ಪ್ರಾರಂಭವಾಗುತ್ತಿದ್ದಂತೆ ಮಳೆ ಸುರಿಯಲು ಪ್ರಾರಂಭಿಸಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಕುರ್ಚಿ ಹಾಗೂ ಟವಲ್ಗಳನ್ನು ತಲೆ ಮೇಲೆ ಇಟ್ಟುಕೊಂಡು ಮಳೆಯಿಂದ ರಕ್ಷಣೆ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.