ಕೋಲಾರ: ಆದಾಯ ಮಿತಿಗಿಂತ ಹೆಚ್ಚಿನ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಕಂದಾಯ ವಿಭಾಗದ ಶಿರಸ್ತೇದಾರ್ ಮುನಿವೆಂಕಟಪ್ಪ ಅವರ ಮನೆ ಮತ್ತು ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೊತ್ತದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ಜಿಲ್ಲೆಯ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ಬಡಾವಣೆಯಲ್ಲಿರುವ 2 ಮನೆ ಹಾಗೂ ಜಿಲ್ಲಾ ಕೇಂದ್ರದಲ್ಲಿನ ಕಚೇರಿ ಮೇಲೆ ಎಸಿಬಿ ಡಿವೈಎಸ್ಪಿ ಮೋಹನ್ ಮತ್ತು ಸಿಬ್ಬಂದಿ ತಂಡವು ಏಕಕಾಲಕ್ಕೆ ದಾಳಿ ನಡೆಸಿದೆ.
ಬೆಳಗಿನ ಜಾವ 5 ಗಂಟೆಯಿಂದ ರಾತ್ರಿವರೆಗೂ ತಪಾಸಣೆ ಮಾಡಿದ ಅಧಿಕಾರಿಗಳು ಆಸ್ತಿ, ವಾಹನ, ಚಿನ್ನಾಭರಣ ಹಾಗೂ ಹಣಕಾಸು ವ್ಯವಹಾರಕ್ಕೆ ಸಂಬಂಧಪಟ್ಟ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿ ಕೊಂಡರು.
‘ಮುನಿವೆಂಕಟಪ್ಪ ಅವರ ಮನೆ ಯಲ್ಲಿ ಒಂದು ಮುಕ್ಕಾಲು ಕೆ.ಜಿ ಚಿನ್ನಾಭರಣ ಮತ್ತು 2 ಕೆ.ಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. ಜತೆಗೆ ಅವರು ಮುಳಬಾಗಿಲು ಸಮೀಪ ಖರೀದಿಸಿರುವ ಸುಮಾರು 50 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಸಿಕ್ಕಿವೆ. ಜಮೀನು ಅವರ ತಾಯಿಯ ಹೆಸರಿನಲ್ಲಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ’ ಎಂದು ಎಸಿಬಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.