ಕೆಜಿಎಫ್: ಶಾಲಾ ಮಕ್ಕಳ ಮೇಲೆ ಇರುವ ಹೊಣೆಗಾರಿಕೆ ತಪ್ಪಿಸಲು ಸರ್ಕಾರ ಹಲವು ಸವಲತ್ತುಗಳನ್ನು ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡುತ್ತಿದೆ. ಸರ್ಕಾರದ ಇಂತಹ ಯೋಜನೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಉಪಯೋಗಿಸಿಕೊಳ್ಳಬೇಕು ಎಂದು ರಾಬರ್ಟಸನ್ಪೇಟೆ ನಗರಸಭೆ ಅಧ್ಯಕ್ಷ ದಯಾನಂದ ಹೇಳಿದರು.
ರಾಬರ್ಟ್ಸನ್ಪೇಟೆಯ ಸೆವನ್ತ್ ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ ಮಂಗಳವಾರ ನಡೆದ ಸ್ವರ್ಣಜಯಂತಿ ಶಹರಿ ರೋಜ್ಗಾರ್ ಯೋಜನೆಯ ಸಮುದಾಯ ಸಂಪರ್ಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದಲ್ಲಿ ಬಡತನ ನಿರ್ಮೂಲನ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಿರ್ಮಲನಗರ, ವಾಜಪೇಯಿ ನಗರ ವಸತಿ ಯೋಜನೆ ಮತ್ತು ಶೇ. 22.75ರ ಯೋಜನೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸವಲತ್ತು ನೀಡಲಾಗುತ್ತಿದೆ ಎಂದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಮಂಜುನಾಥಾಚಾರಿ ಮಾತನಾಡಿ, ಮಕ್ಕಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ವಿದ್ಯೆಯ ಜತೆ ಇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಬೇಕು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಗೋಪಿನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿ ಶ್ರೀನಿವಾಸರೆಡ್ಡಿ, ಶಾಲಾ ಮುಖ್ಯೋಪಾಧ್ಯಾಯ ಗಜರಾಜ್ಡೇನಿಯಲ್, ಮಾಲ, ನಗರಸಭೆಯ ವ್ಯವಸ್ಥಾಪಕ ಶ್ರೀಕಾಂತ್ ಉಪಸ್ಥಿತರಿದ್ದರು. ನಗರದ ವಿವಿಧ ಶಾಲೆಯ 400ಕ್ಕೂ ಹೆಚ್ಚು ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಪ್ರಭಾಕರ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.