ಶ್ರೀನಿವಾಸಪುರ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಪೋಷಕರು ಇದನ್ನು ಮನಗಂಡು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ನಾರಾಯಣಸ್ವಾಮಿ ಸಲಹೆ ನೀಡಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆದ ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಹಾಗೂ ಆಂಗ್ಲ ಭಾಷಾ ಮಾಧ್ಯಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಲೆಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು. ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಕೆ.ನಾಗರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ಖಾಸಗಿ ಶಾಲಾ ಮಕ್ಕಳೊಂದಿಗೆ ಸ್ಪರ್ಧಿಸಬೇಕು. ಸರ್ಕಾರಿ ಶಾಲೆಗಳ ಬಗ್ಗೆ ನಂಬಿಕೆ ಇಟ್ಟು ಶಾಲೆಗೆ ಬರಬೇಕು. ಖಾಸಗಿ ಶಾಲೆಯಲ್ಲಿ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಭ್ರಮೆ ಬಿಡಬೇಕು ಎಂದು ಹೇಳಿದರು.
ಬಿಇಓ ಎಚ್.ಮಹ್ಮದ್ ಖಲೀಲ್ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ. ಇದರ ಕೀರ್ತಿ ತಾಲ್ಲೂಕಿನ ಶಿಕ್ಷಕರು ಹಾಗೂ ಪೋಷಕರಿಗೆ ಸಲ್ಲಬೇಕು ಎಂದು ಹೇಳಿದರು. ಉಪ ಪ್ರಾಂಶುಪಾಲ ಎನ್.ಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.