ಮುಳಬಾಗಿಲು: ತಾಲ್ಲೂಕಿನ ಅಂಬ್ಲಿಕಲ್ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವ್ಯಾಪ್ತಿಗೆ ಒಳಪಟ್ಟ ಜಮೀನನ್ನು ಗ್ರಾಮದ ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿವೇಶನ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್ ಬಿ.ಎನ್.ಪ್ರವೀಣ್ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಅಂಬ್ಲಿಕಲ್ ಗ್ರಾಮದ ಸರ್ಕಾರಿ ಶಾಲೆಯ ಸರ್ವೆ ಸಂಖ್ಯೆ 5ರಲ್ಲಿ ಸುಮಾರು 9 ಎಕರೆ ಜಮೀನು ಇದ್ದು, ಈ ಪೈಕಿ 4ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇನ್ನೂ ಕೆಲವೆಡೆಯ ಸ್ಥಳದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳು ಮನೆಯನ್ನು ಕಟ್ಟಿಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿರುವುದು ಖಂಡನೀಯ ಎಂದು ಕಾರ್ಯಕರ್ತರು ದೂರಿದರು.
ಇಲ್ಲಿನ ಸರ್ಕಾರಿ ಶಾಲೆಯ ಖಾಲಿ ಜಾಗವನ್ನು ಗ್ರಾಮದ ಕೆಲ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ ದೂರು ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಟೂಡೆಂಟ್ ಫೆಡರೇಷನ್
ಆಫ್ ಇಂಡಿಯಾದ (ಎಸ್ಎಫ್ಐ) ಜಿಲ್ಲಾ ಘಟಕದ ಕಾರ್ಯದರ್ಶಿ ಅಂಬ್ಲಿಕಲ್ ಎನ್.ಶಿವಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಸರ್ಕಾರಿ ಶಾಲೆಯ ಜಮೀನಿನ ಒತ್ತುವರಿಯನ್ನು ತೆರವುಗೊಳಿಸದಿದ್ದರೆ ಶಾಲೆಯ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿಯ ಧರಣಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಬಿ.ಎನ್.ಪ್ರವೀಣ್, ‘ಸರ್ವೆ ಇಲಾಖೆ ಅಧಿಕಾರಿಗಳಿಂದ ಶಾಲೆಯ ಜಾಗವನ್ನು ಸರ್ವೆ ಮಾಡಿಸಿ ಕೂಡಲೆ ಒತ್ತುವರಿಯನ್ನು ತೆರವು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಕರ್ನಾಟಕ ಹಸಿರು ಸೇನೆ ತಾಲ್ಲೂಕು ಘಟಕದ ಕಾರ್ಯದರ್ಶಿ ಮಂಜುನಾಥ್, ಡಿವೈಎಫ್ಐನ ತಾಲ್ಲೂಕು ಘಟಕದ ಸಂಚಾಲಕ ಪುಣ್ಯಹಳ್ಳಿ ರಾಮಾಂಜಿ, ರವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.