ADVERTISEMENT

ಹೋರಾಟದಿಂದ ಸಮಸ್ಯೆಗೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2017, 6:15 IST
Last Updated 18 ಡಿಸೆಂಬರ್ 2017, 6:15 IST

ಕೋಲಾರ: ‘ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೋರಾಟದಿಂದ ಮಾತ್ರ ಸಾಧ್ಯ ಎಂದು ಶಾಸಕಿ ವೈ.ರಾಮಕ್ಕ ಅಭಿಪ್ರಾಯಪಟ್ಟರು. ನಗರದಲ್ಲಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದಿಂದ ಭಾನುವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಎನ್‌ಪಿಎಸ್ ನೌಕರರ ಜಾಗೃತಿ ಸಮಾವೇಶ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ನೌಕರರಿಗೆ ಸಮರ್ಪಕವಾಗಿ ಸೌಕರ್ಯ ಕಲ್ಪಿಸದ ಕಾರಣ ಕೆಲಸಕ್ಕೆ ರಕ್ಷಣೆಯಿಲ್ಲದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರು ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಇದಕ್ಕೆಲ್ಲ ನೂತನವಾಗಿ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆಯೇ ಕಾರಣವಾಗಿದೆ ಎಂದು ವಿಷಾದಿಸಿದರು.

ನೂತನ ಪಿಂಚಣಿ ಯೋಜನೆಯ ಬಗ್ಗೆ ರಾಜ್ಯದ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ ಹಾಗೂ ಆನಂತಕುಮಾರ್ ಅವರಿಗೆ ಮಾಹಿತಿ ನೀಡಿ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ADVERTISEMENT

ಸೌಕರ್ಯ ಕಲ್ಪಿಸುವಲ್ಲಿ ವಿಫಲ: ‘ಸರ್ಕಾರಿ ನೌಕರರಿಗೆ ಅಗತ್ಯವಿರುವ ಸೌಕರ್ಯ ಕಲ್ಪಿಸಿ ಕೆಲಸ ಮಾಡಿಸಿಕೊಳ್ಳುವಲ್ಲಿ ಸರ್ಕಾರಗಳು ವಿಫಲವಾಗುತ್ತಿವೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ ದೂರಿದರು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ರಾಜಕಾರಣ ಶಾಶ್ವತವಲ್ಲ, ಕಾರ್ಯಾಂಗದಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಸೌಕರ್ಯ ಕಲ್ಪಿಸುವ ಜವಾಬ್ದಾರಿ ಶಾಸಕಾಂಗದ ಮೇಲಿದೆ. ಆದರೆ ಸಂಸತ್ ಹಾಗೂ ಸದನದಲ್ಲಿ ಚಿಂತಕರ ಸಂಖ್ಯೆ ಕಡಿಮೆಯಾಗಿದ್ದು, ಸ್ವಾರ್ಥಿಗಳು ಹೆಚ್ಚಾಗಿದ್ದಾರೆ. ಇದರಿಂದಾಗಿ ಅನೇಕ ಸಮಸ್ಯೆಎದುರಿಸಬೇಕಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಸಕಾಂಗ ಶಾಶ್ವತವಲ್ಲ, ಕಾರ್ಯಾಂಗ ಶಾಶ್ವತ ಎಂಬುದನ್ನು ಗಮನದಲ್ಲಿಟ್ಟುಕೊಂಡು ಪಿಂಚಣಿ ಯೋಜನೆ ಜಾರಿಗೊಳಿಸಬೇಕಾಗಿತ್ತು. ನೌಕರರ ಶೇ 10ರಷ್ಟು ಪಿಂಚಣಿ ಕಡಿತಗೊಳಿಸಿಕೊಂಡು ಷೇರು ಮಾರುಕಟ್ಟೆಗಲ್ಲಿ ಠೇವಣಿ ಇಡುವದರಿಂದ ಏನು ಲಾಭಸಿಗುತ್ತದೆ ಎಂದು ಪ್ರಶ್ನಿಸಿದರು.

ಷೇರು ಮಾರುಕಟ್ಟೆಗಳು ಅಡ್ಡಗೋಡೆಯ ಮೇಲೆ ದೀಪ ಇದ್ದಂತೆ. ಯಾವಾಗ ಲಾಭಗಳಿಸುತ್ತದೆಯೊ, ಯಾವಾಗ ದಿವಾಳಿಯಾಗುತ್ತದೆಯೊ ಗೊತ್ತಿಲ್ಲ. ಪಿಂಚಣಿ ಕಡಿತಗೊಳಿಸಿ ಎಲ್ಲೋ ಠೇವಣಿ ಇಡುವ ಬದಲು ನೌಕರರಿಗೆ ಎಲ್ಲ ರೀತಿ ಸೌಕರ್ಯ ಕಲ್ಪಿಸಿ ಹೆಚ್ಚಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇಲ್ಲದಿದ್ದರೆ ನೌಕರರು ಭ್ರಷ್ಟಚಾರಿಗಳಾಗಲು ಅವಕಾಶ ನೀಡಿದಂತಾಗುತ್ತದೆ ಎಂದು ಹೇಳಿದರು.

ಧರಣಿಗೆ ಬೆಂಬಲ: ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದೆ. ನಿಮ್ಮ ಹೋರಾಟಕ್ಕೆ ಜಯ ಸಿಗುತ್ತದೆ. ವಿದ್ಯಾರ್ಥಿ ಸಂಘಟನೆ ನಿಮ್ಮೊಟ್ಟಿಗೆ ತೊಡಗಿಸಿಕೊಂಡು ಪತ್ರ ಚಳವಳಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಿ. ಜ. 5ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲು ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಆರ್.ನಾಗಮಣಿ ಮಾತನಾಡಿ, ‘ನೂತನ ಪಿಂಚಣಿ ಯೋಜನೆ ಜಾರಿಗೆ ತಂದ ಮೇಲೆ ನೌಕರರಿಗೆ ರಕ್ಷಣೆಯಿಲ್ಲದಂತಾಗಿದ್ದು, ಈ ಯೋಜನೆಯನ್ನು ರದ್ದುಗೊಳಿಸಲು ಹಂತ ಹಂತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ’ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಗಾಂಧಿ ಉದ್ಯಾನದಿಂದ ರಂಗಮಂದಿರದವರೆಗೂ ಎನ್‌ಪಿಎಸ್ ಯೋಜನೆ ವಿರೋಧಿಸಿ ವಿವಿಧ ಸರ್ಕಾರಿ ಇಲಾಖೆಗಳ ನೌಕರರು ಮೆರವಣಿಗೆ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಮ, ಗೌರವ ಸಲಹೆಗಾರ ಎಸ್.ಎಸ್.ಹದ್ಲಿ, ಜಿಲ್ಲಾ ಘಟಕದ ಗೌರವ ಸಲಹೆಗಾರ ನಂದೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಖಜಾಂಚಿ ರವಿಚಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.