ADVERTISEMENT

48 ತಾಸಿನಲ್ಲಿ 20 ಮಂದಿ ಕೊನೆಯುಸಿರು

ಕೋವಿಡ್‌ ರುದ್ರ ನರ್ತನಕ್ಕೆ ಬೆಚ್ಚಿಬಿದ್ದ ಜಿಲ್ಲೆಯ ಜನ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 15:12 IST
Last Updated 5 ಜೂನ್ 2021, 15:12 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಕೋವಿಡ್‌ ರುದ್ರ ನರ್ತನಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.

ಶುಕ್ರವಾರವಷ್ಟೇ 10 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಶನಿವಾರ ಮತ್ತೆ 10 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನದಲ್ಲಿ 20 ಮಂದಿ ಮೃತಪಟ್ಟಂತೆ ಆಗಿದ್ದು, ಸೋಂಕಿತರ ಸಾವಿನ ಓಟ ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ 4 ಮಂದಿ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮಾಲೂರು ಹಾಗೂ ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು ಶನಿವಾರ ಅಸುನೀಗಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 409ಕ್ಕೆ ಏರಿಕೆಯಾಗಿದೆ.

ADVERTISEMENT

ಸೋಂಕಿತರ ಸರಣಿ ಸಾವಿನ ಬೆನ್ನಲ್ಲೇ ಹೊಸದಾಗಿ 424 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 5,533ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 140 ಮಂದಿಗೆ, ಮಾಲೂರು ತಾಲ್ಲೂಕಿನ 80 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 26, ಕೆಜಿಎಫ್‌ ತಾಲ್ಲೂಕಿನ 63, ಮುಳಬಾಗಿಲು ತಾಲ್ಲೂಕಿನ 64 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 51 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಸಂಖ್ಯೆ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 736 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 224 ಮಂದಿ, ಮಾಲೂರು ತಾಲ್ಲೂಕಿನ 162, ಬಂಗಾರಪೇಟೆ ತಾಲ್ಲೂಕಿನ 112, ಕೆಜಿಎಫ್‌ ತಾಲ್ಲೂಕಿನ 81, ಮುಳಬಾಗಿಲು ತಾಲ್ಲೂಕಿನ 106 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 51 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.