ADVERTISEMENT

38 ಡೆಂಗೆ ಪ್ರಕರಣ ಪತ್ತೆ; ಅಧಿಕಾರಿಗಳಿಗೆ ತರಾಟೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2012, 6:20 IST
Last Updated 22 ಜುಲೈ 2012, 6:20 IST

ಬಂಗಾರಪೇಟೆ: ತಾಲ್ಲೂಕಿನಲ್ಲಿ 38 ಡೆಂಗೆ ಪ್ರಕರಣ ಪತ್ತೆಯಾಗಿದ್ದರೂ ಆರೋಗ್ಯ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೆ ಕಡೆಗಣಿಸಿದ್ದಾರೆ. ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂಗೆ ಜ್ವರ ಹರಡುತ್ತಿದೆ.

ಆದರೆ ಆರೋಗ್ಯ ಅಧಿಕಾರಿಗಳು ಪಕ್ಷ ಭೇಟಿ ನೀಡಿ ವಿಚಾರಣೆಯೂ ಮಾಡಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯರು ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಇಲಾಖೆ ವರದಿ ಮಂಡಿಸಿದಾಗ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ತಿಂಗಳಿಗೆ 1 ಕೋಟಿ ವೆಚ್ಚವಾಗುತ್ತಿದೆ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಕೈಗೊಂಡ ಕಾರ್ಯ ಚಟುವಟಿಕೆಗಳು ನಮ್ಮ ಗಮನಕ್ಕೆ ಬಂದೇ ಇಲ್ಲ ಎಂದು ಸದಸ್ಯ ವಿಜಯ ಕುಮಾರ್, ಚಂದ್ರಮ್ಮ ಮತ್ತಿತರರು ಪ್ರಶ್ನಿಸಿದರು. ಕಾರ್ಯ ಯೋಜನೆಗೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ಒತ್ತಾಯ ಮಾಡಿದರು.

ತೋಟಗಾರಿಕೆ ಇಲಾಖೆಯಲ್ಲಿ ಮಾವಿನ ಸಸಿಗಳಿಗೆ ನೀರೆರೆದು ಪೋಷಣೆ ಮಾಡಿಲ್ಲ. ಒಣಗಿದ ಗಿಡಗಳನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಸದಸ್ಯ ವಿಜಯ ಕುಮಾರ್ ಗರಂ ಆದರು. ಈ ಬಾರಿ ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲ ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.