ADVERTISEMENT

ಕೋಲಾರ | 4 ಸೋಂಕಿತರ ಸಾವು: 57 ಮಂದಿಗೆ ಸೋಂಕು

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಮಹಾ ಸ್ಫೋಟ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 17:13 IST
Last Updated 19 ಜುಲೈ 2020, 17:13 IST
ಕೋಲಾರ ತಾಲ್ಲೂಕು ನರಸಾಪುರ ಗ್ರಾಮದ ‘ಎ’ ಬ್ಲಾಕ್‌ನ ಇಬ್ಬರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯು ಸುತ್ತಮುತ್ತಲ ಪ್ರದೇಶವನ್ನು ಭಾನುವಾರ ಸೀಲ್‌ಡೌನ್‌ ಮಾಡಿದರು.
ಕೋಲಾರ ತಾಲ್ಲೂಕು ನರಸಾಪುರ ಗ್ರಾಮದ ‘ಎ’ ಬ್ಲಾಕ್‌ನ ಇಬ್ಬರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯು ಸುತ್ತಮುತ್ತಲ ಪ್ರದೇಶವನ್ನು ಭಾನುವಾರ ಸೀಲ್‌ಡೌನ್‌ ಮಾಡಿದರು.   

ಕೋಲಾರ: ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದ್ದು, ಒಂದೇ ದಿನ 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಆರ್‌.ಎಲ್‌ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಲಾರ ತಾಲ್ಲೂಕಿನ ಇಬ್ಬರು ಪುರುಷರು ಹಾಗೂ 65 ವರ್ಷದ ವಯೋವೃದ್ಧೆ, ಶ್ರೀನಿವಾಸಪುರ ತಾಲ್ಲೂಕಿನ 39 ವರ್ಷದ ಸೋಂಕಿತ ಪುರುಷರೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 57 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ. ಕೊರೊನಾ ಸೋಂಕಿನ ಆರ್ಭಟಕ್ಕೆ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ 11 ಮಂದಿಗೆ, ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಿಂದ ಇಬ್ಬರಿಗೆ, ಹೊರ ಜಿಲ್ಲೆಗೆ ಹೋಗಿದ್ದ 5 ಮಂದಿಗೆ, ಮೂವರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಜತೆಗೆ 4 ಮಂದಿ ಪುರುಷರು ಮತ್ತು ಮೂವರು ಮಹಿಳೆಯರಿಗೆ ಸೋಂಕು ಇರುವುದು ಖಚಿತವಾಗಿದ್ದು, ಇವರ ಸೋಂಕಿನ ಮೂಲ ಪತ್ತೆಯಾಗಿಲ್ಲ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 8 ಮಂದಿಗೆ, ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ಮೂವರಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಿಗೆ ಸೋಂಕು ಹರಡಿದೆ. 55 ವರ್ಷದ ಪುರುಷರೊಬ್ಬರಿಗೆ ಸೋಂಕು ಬಂದಿರುವುದು ದೃಢಪಟ್ಟಿದ್ದು, ಇವರ ಸೋಂಕಿನ ಮೂಲದ ಬಗ್ಗೆ ವೈದ್ಯಕೀಯ ಸಿಬ್ಬಂದಿ ಪರಿಶೀಲನೆ ಮುಂದುವರಿಸಿದ್ದಾರೆ.

ಮಾಲೂರು ತಾಲ್ಲೂಕಿನಲ್ಲಿ 34 ವರ್ಷದ ಗರ್ಭಿಣಿಗೆ, ಸೋಂಕಿತ ವ್ಯಕ್ತಿಯ ಸಂಖ್ಯೆ 64,594ರ ಸಂಪರ್ಕದಿಂದ ಮೂವರಿಗೆ, ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ ಮತ್ತು ಬೆಳಗಾವಿ ಜಿಲ್ಲೆಗೆ ಹೋಗಿದ್ದ ಬಂದಿದ್ದ ಇಬ್ಬರಿಗೆ ಸೋಂಕು ತಗುಲಿದೆ. ಜತೆಗೆ 70 ವರ್ಷದ ವಯೋವೃದ್ಧರೊಬ್ಬರಿಗೆ ಸೋಂಕು ತಗುಲಿದ್ದು, ಸೋಂಕಿನ ಮೂಲ ಗೊತ್ತಾಗಿಲ್ಲ.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸೋಂಕಿತ ವ್ಯಕ್ತಿಯ ಸಂಖ್ಯೆ 51,927ರ ಸಂಪರ್ಕದಿಂದ ಮಹಿಳೆಗೆ ಮತ್ತು ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಪುರುಷರೊಬ್ಬರಿಗೆ ಸೋಂಕು ಹರಡಿದೆ. ಅಲ್ಲದೇ, 22 ವರ್ಷದ ವ್ಯಕ್ತಿಗೆ ಬಂದಿದೆ. ಆದರೆ, ಇವರ ಸೋಂಕಿನ ಮೂಲ ಪತ್ತೆಯಾಗಿಲ್ಲ. ಕೆಜಿಎಫ್‌ ಮತ್ತು ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ತಲಾ ಒಬ್ಬರಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.