ADVERTISEMENT

9ಕ್ಕೆ ರಾಷ್ಟ್ರೀಯ ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 14:45 IST
Last Updated 2 ಮಾರ್ಚ್ 2019, 14:45 IST

ಕೋಲಾರ: ‘ಎಲ್ಲರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಸಮಿತಿಗಳಿಂದ ಮಾರ್ಚ್‌ 9ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಐ.ಎಫ್.ಬಿದರಿ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಾರ್ಚ್‌ 9ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಅದಾಲತ್ ಆರಂಭವಾಗುತ್ತದೆ. ಕಕ್ಷಿದಾರರು ಇದರ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದರು.

‘ಭೂಸ್ವಾಧೀನ ಪ್ರಕರಣ, ಕೌಟುಂಬಿಕ ನ್ಯಾಯಾಲಯ ಪ್ರಕರಣ, ವೇತನ ಹಾಗೂ ಭತ್ಯೆಗೆ ಸಂಬಂಧಿಸಿದ ಪ್ರಕರಣ, ಮನೆ ಬಾಡಿಗೆ ಮತ್ತು ಅನುಭೋಗದ ಹಕ್ಕು, ಮೊಕದ್ದಮೆ ಸೇರಿದಂತೆ ಸಿವಿಲ್ ಹಾಗೂ ಕ್ರಿಮಿನಲ್ ವ್ಯಾಜ್ಯಗಳ ಪರಿಹಾರಕ್ಕೆ ಅದಾಲತ್‌ ಸಹಕಾರಿಯಾಗಲಿದೆ. ಸಣ್ಣ ಪುಟ್ಟ ಪ್ರಕರಣಗಳಲ್ಲಿ ಕಾನೂನಿನ ಅರಿವಿಲ್ಲದೆ ಅನೇಕರು ವರ್ಷಾನುಗಟ್ಟಲೇ ನ್ಯಾಯಾಲಯಕ್ಕೆ ಬರುತ್ತಿದ್ದಾರೆ. ಅಂತಹವರಿಗೆ ಅದಾಲತ್‌ನಿಂದ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ವಿಚಾರಣೆಗೆ ಬಾಕಿಯಿರುವ ರಾಜೀ ಆಗಬಹುದಾದ ಅಪರಾಧ ಪ್ರಕರಣಗಳು, ಚೆಕ್ ಅಮಾನ್ಯ, ಸಾಲ ವಸೂಲಾತಿ, ಅಪಘಾತ, ಕಾರ್ಮಿಕರ ವೇತನ ಹಾಗೂ ಉದ್ಯೋಗದಲ್ಲಿ ಪುನರ್ ಸ್ಥಾಪನೆ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು' ಎಂದು ವಿವರಿಸಿದರು.

ಪ್ರಕರಣ ಗುರುತು: ‘ಅದಾಲತ್‌ಗೆ ಬಾಕಿ ಇರುವ 760 ಮತ್ತು ವ್ಯಾಜ್ಯ ಪೂರ್ವ 338 ಪ್ರಕರಣ ಗುರುತಿಸಲಾಗಿದೆ. ಮಾರ್ಚ್‌ 8ರವರೆಗೂ ಮತ್ತಷ್ಟು ಪ್ರಕರಣಗಳನ್ನು ಗುರುತಿಸಲಾಗುವುದು. ಜಿಲ್ಲೆಯ ಜನ ಅದಾಲತ್‌ನಲ್ಲಿ ಭಾಗವಹಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್ ಜಿ.ಶಿರೋಳ್ ಹೇಳಿದರು.

‘ಹಿಂದಿನ ವರ್ಷ ನ್ಯಾಯಾಲಯದಲ್ಲಿ ಬಾಕಿಯಿದ್ದ 1,214 ಪ್ರಕರಣ ಮತ್ತು ವ್ಯಾಜ್ಯ ಪೂರ್ವ 336 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಜತೆಗೆ ₹ 6.51 ಕೋಟಿ ರಾಜೀ ಮೊತ್ತ ನೀಡಲಾಗಿದೆ’ ಎಂದು ವಿವರಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಆರ್.ಜಯರಾಮ್, ಪ್ರಧಾನ ಕಾರ್ಯದರ್ಶಿ ಎನ್.ಡಿ.ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.