ADVERTISEMENT

ವೇಮನ ಸಮಾಜ ಸುಧಾರಣೆಯ ಮಾರ್ಗದರ್ಶಕ: ಉಪ ವಿಭಾಗಾಧಿಕಾರಿ ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 14:27 IST
Last Updated 19 ಜನವರಿ 2020, 14:27 IST
ಕೋಲಾರದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಸೋಮಶೇಖರ್ ಮಾತನಾಡಿದರು.
ಕೋಲಾರದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಸೋಮಶೇಖರ್ ಮಾತನಾಡಿದರು.   

ಕೋಲಾರ: ‘ವೇಮನ ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕಷ್ಟೇ ಸೀಮಿತವಾಗದೆ ಇಡೀ ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಸಮಾಜ ಸುಧಾರಣೆಯ ಮಾರ್ಗದರ್ಶನ ನೀಡಿದ್ದಾರೆ’ ಎಂದು ಉಪ ವಿಭಾಗಾಧಿಕಾರಿ ಸೋಮಶೇಖರ್ ತಿಳಿಸಿದರು.

ಜಿಲ್ಲಾಡಳಿತದಿಂದ ಭಾನುವಾರ ನಗರದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ವೇಮನರ ಸಂದೇಶವನ್ನು ಮನೆ ಮನೆಗೂ ತಲುಪಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು’ ಎಂದು ಸಲಹೆ ನೀಡಿದರು.

‘ಮನುಷ್ಯರಲ್ಲಿ ಸ್ವಾರ್ಥ, ಅಸಮಾನತೆ, ಕೀಳರಿಮೆ ಗುಣಗಳನ್ನು ಮನಗಂಡು ಅವುಗಳನ್ನು ಹೋಗಲಾಡಿಸಿ ಉತ್ತಮ ಸಮಾಜ ರೂಪಿಸಲು ವೇಮನ ವಿಚಾರಗಳು ಪೂರಕವಾಗಿವೆ. ವೇಮನ ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ತತ್ವಜ್ಞಾನಿ, ದಾರ್ಶನಿಕರಾಗಿದ್ದರು. ಸಮಾಜ ಸುಧಾರಣೆಗೆ ಶ್ರಮಿಸಿದ ಅವರು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಹಸೀಲ್ದಾರ್ ಶೋಭಿತಾ ಮಾತನಾಡಿ, ‘ವೇಮನ ಅವರು ಪದ್ಯಗಳ ಮೂಲಕ ಸಮಾಜದ ಬದಲಾವಣೆಗೆ ಹೋರಾಡಿದವರು, ಸುಮಾರು ೨,೦೦೦ ಪದ್ಯಗಳನ್ನು ರಚಿಸಿದ್ದು ಅವುಗಳಲ್ಲಿ ೬೦೦ ಪದ್ಯಗಳು ಕನ್ನಡಕ್ಕೆ ಅನುವಾದವಾಗಿವೆ’ ಎಂದು ಹೇಳಿದರು.

ಸಂವಿಧಾನದಲ್ಲೂ ವೇಮನರ ಆಶಯಗಳು ಅಡಗಿವೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಮಾರ್ಗದರ್ಶನ ನೀಡಿರುವ ಮಹನಿಯರ ಜಯಂತಿ ಆಚರಿಸುವುದರ ಜತೆಗೆ ಅವರ ತತ್ವಾದರ್ಶದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಸ್ಮಿತಾ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ನಿವೃತ್ತ ಉಪನ್ಯಾಸಕರಾದ ನಾರಾಯಣರೆಡ್ಡಿ, ಸುಬ್ಬಾರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.