ADVERTISEMENT

ಜನಸಾಮಾನ್ಯರ ಪರ ಎಎಪಿ ಕೆಲಸ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 13:48 IST
Last Updated 12 ಏಪ್ರಿಲ್ 2022, 13:48 IST

ಕೋಲಾರ: ‘ಪಕ್ಷದ ತತ್ವ ಸಿದ್ಧಾಂತ ತಿಳಿದು ಜನಸಾಮಾನ್ಯರು ಹಾಗೂ ದೀನದಲಿತರ ಪರವಾಗಿ ಕೆಲಸ ಮಾಡುತ್ತೇವೆ. ಜತೆಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಜಿಲ್ಲಾ ವೀಕ್ಷಕ ರವಿಶಂಕರ್ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ‘ಪಕ್ಷದಲ್ಲಿ ಯಾವುದೇ ಜಾತಿ, ಧರ್ಮದ ಭೇದಭಾವವಿಲ್ಲ. ಈಗಾಗಲೇ ಹಲವು ಮುಖಂಡರು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯ ಚಟುವಟಿಕೆ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡು ಸಂಘಟನೆ ಗಟ್ಟಿಗೊಳಿಸುತ್ತಿದ್ದಾರೆ. ಕಾರ್ಯಕರ್ತರು ಸಹ ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿಯುತ್ತಿದ್ದಾರೆ’ ಎಂದರು.

‘ನಾನು ಕೋಲಾರ ಜಿಲ್ಲೆಯಲ್ಲಿ ಹುಟ್ಟಿ ಬೆಳೆದ ವ್ಯಕ್ತಿ. ಸಂಸದನಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಹೋರಾಟ ನಡೆಸುವ ಮೂಲಕ ಜಿಲ್ಲೆಯ ಏಳಿಗೆಗೆ ಶ್ರಮಿಸಿದ್ದೇನೆ. ನನ್ನನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರ ಋಣ ತೀರಿಸಲು ಮತ್ತೆ ಕೋಲಾರಕ್ಕೆ ಬಂದಿದ್ದೇನೆ’ ಎಂದು ಮಾಜಿ ಸಂಸದ ವಿ.ವೆಂಕಟೇಶ್ ಹೇಳಿದರು.

ADVERTISEMENT

‘ನಾನೊಬ್ಬ ಗಾಂಧಿವಾದಿ ಮತ್ತು ಅಂಬೇಡ್ಕರ್‌ರ ಅನುಯಾಯಿ. ಅವರ ತತ್ವ ಸಿದ್ಧಾಂತ ಪಾಲಿಸಿಕೊಂಡು ಬಂದಿದ್ದೇನೆ. ಆಮ್ ಆದ್ಮಿ ಪಕ್ಷದ ತತ್ವ ಸಿದ್ದಾಂತಗಳು ಸಹ ಅದೇ ರೀತಿ ಇವೆ. ಎಎಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಅವರ ಮಾತಿಗೆ ಬೆಲೆ ಕೊಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ’ ಎಂದು ವಿವರಿಸಿದರು.

ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸಹೇರಾ ಭಾನು, ಮುಖಂಡ ವಿನೋದ್‍ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.