ಕೋಲಾರ: ಇಲ್ಲಿ ಬುಧವಾರ ನಡೆದ ಕಂದಾಯ ಮತ್ತು ಪಿಂಚಣಿ ಅದಾಲತ್ನಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಪಿಂಚಣಿ, ಮೈತ್ರಿ, ಮನಸ್ವಿನಿ ಯೋಜನೆಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಸುಮಾರು 50 ಫಲಾನುಭವಿಗಳಿಗೆ ಆದೇಶದ ಪ್ರತಿ ವಿತರಿಸಿದರು.
‘ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಸರ್ಕಾರದ ಸವಲತ್ತುಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಅಲೆಯುವುದನ್ನು ತಪ್ಪಿಸಲು ಕಂದಾಯ ಮತ್ತು ಪಿಂಚಣಿ ಆದಾಲತ್ ನಡೆಸಲಾಗುತ್ತಿದೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಪಿಂಚಣಿ, ಪಹಣಿ ತಿದ್ದುಪಡಿ. ಹಳೆಯ ಕ್ರಯಪತ್ರ ತಿದ್ದುಪಡಿ, ನ್ಯಾಯಾಲಯ ಆದೇಶಗಳಿಗೆ ಸಂಬಂಧಿಸಿದಂತೆ ಅದಾಲತ್ನಲ್ಲಿ ಅರ್ಜಿ ಸ್ವೀಕರಿಸಲಾಗುವುದು’ ಎಂದರು.
‘ಮಾಲೂರು ತಾಲ್ಲೂಕಿನ ಟೇಕಲ್ನಲ್ಲಿ ಇತ್ತೀಚೆಗೆ ನಡೆದ ಕಂದಾಯ ಮತ್ತು ಪಿಂಚಣಿ ಅದಾಲತ್ನಲ್ಲಿ 574 ಅರ್ಜಿ ಸಲ್ಲಿಕೆಯಾಗಿದ್ದವು. ಇದರಲ್ಲಿ ಸ್ಥಳದಲ್ಲೇ 104 ಮಂದಿಗೆ ಆದೇಶದ ಪ್ರತಿ ನೀಡಲಾಯಿತು. ಅದಾಲತ್ನಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ವಿವಿದ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ ಒಂದು ತಿಂಗಳಲ್ಲಿ ಪರಿಹಾರ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.
ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಶೋಭಿತಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.