ADVERTISEMENT

ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಲಹೆ

ಮಹಿಳಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 14:31 IST
Last Updated 9 ಮಾರ್ಚ್ 2020, 14:31 IST
ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಮಾತನಾಡಿದರು.
ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಮಾತನಾಡಿದರು.   

ಕೋಲಾರ: ‘ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಬದುಕಲು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದ ಮುಖ್ಯವಾನಿಗೆ ಬರಲು ಸಾಧ್ಯ’ ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮಮವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ, ‘ಹೆಣ್ಣು ಉತ್ತಮ ದಾರಿಯನ್ನು ಆಯ್ಕೆ ಮಾಡಿಕೊಂಡು ಗುರಿ ಸಾಧನೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಭಾರತ ತಲ ತಲಾಂತರದಿಂದ ಪುರುಷ ಪ್ರಧಾನ ಸಮಾಜ ವ್ಯವಸ್ಥೆಯನ್ನು ಹೊಂದಿದೆ. ಆದರೂ ಹೆಣ್ಣು ತನಗಿರುವ ಕಟ್ಟು ಪಾಡುಗಳಲ್ಲೇ ಸಾಧನೆಯನ್ನು ಮಾಡಬೇಕು. ಪುರುಷರಿಗೆ ಹೊಲಿಕೆ ಮಾಡಿಕೊಳ್ಳದೆ, ತನ್ನ ವ್ಯಕ್ತಿತ್ವಕ್ಕೆ ತನ್ನನ್ನು ಹೊಲಿಕೆ ಮಾಡಿಕೊಳ್ಳಬೇಕು. ಭವಿಷ್ಯದ ಮುಂದಾಲೋಚನೆ ಇಟ್ಟುಕೊಂಡು ಜೀವನ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಹೆಣ್ಣು ಸಮಾಜದಲ್ಲಿ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಆರ್ಥಿಕವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನದೇ ಆದ ಛಾಪನ್ನು ಮೂಡಿಸಬೇಕು. ಕಾನೂನು, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಸಮಾಜದಲ್ಲಿ ಅಗುತ್ತಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜ್ಞಾನಾರ್ಜನೆ ಹೆಚ್ಚು ಒತ್ತು ನೀಡಬೇಕು’ ಎಂದರು.

ವಕೀಲೆ ಗಾಯತ್ರಿ ಮಾತನಾಡಿ, ‘ಹೆಣ್ಣು ಸಮಾಜದ ಪ್ರತಿಯೊಂದು ಹಂತದಲ್ಲೂ ಜಾಗೃತವಾಗಿವಾಗಿರಬೇಕು. ಹೆಣ್ಣು ಧೈರ್ಯವಾಗಿ ಸಮಾಜಕ್ಕೆ ಅಂಜದೆ ಮುನ್ನಡೆಯಬೇಕು. ಕಾನೂನು ನೀಡಿರುವ ಹಕ್ಕುಗಳನ್ನು ಮಾತ್ರ
ಬಳಸಿಕೊಳ್ಳದೆ ಕರ್ತವ್ಯಗಳ ಬಗ್ಗೆ ಜವಾಬ್ದಾರಾಗಿಬೇಕು’ ಎಂದು ಎಚ್ಚರಿಸಿದರು.

‘ಮಹಿಳೆಯರಿಗೆ ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ಉಂಟಾದರೆ ವಿಶಾಖ ಸಮಿತಿಗೆ ದೂರು ಸಲ್ಲಿಸಿದರೆ ಕಾನೂನಾತ್ಮಕವಾಗಿ ಪರಿಹಾರ ಕಲ್ಪಿಸಲಾಗುವುದು. ಸಮಾಜದಲ್ಲಿ ನಡೆಯುತ್ತಿರುವ ಶೋಷಣೆ, ದೌರ್ಜನ್ಯ, ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಬೇಕು’ ಎಂದು ಹೇಳಿದರು.

‘ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡಿ ತಾಂತ್ರಿಕ ಮತ್ತು ಔದ್ಯೋಗಿಕ ಕ್ಷೇತ್ರಗಳಲ್ಲಿ ದುಡಿಯಲು ಅವಕಾಶ ಮಾಡಿಕೊಟ್ಟಿದೆ. ಇದರಿಂದ ಕುಟುಂಬ ಮತ್ತು ಸಮಾಜ ಆರ್ಥಿಕವಾಗಿ ಸ್ವಾವಲಂಬಿಯಾಗಲು ಅನುಕೂಲವಾಗಲಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸರ್ಕಾರಿಸರ್ಕಾರಿಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರಪ್ರಸಾದ್ ಮಾತನಾಡಿ, ‘ಅನೇಕ ಮಂದಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ’ ಎಂದರು.

‘ರಾಜಕೀಯ ಕ್ಷೇತ್ರ ಸೇರಿದಂತೆ ಅನೇಕ ಕಡೆ ಮೀಸಲಾತಿ ಇದ್ದರೂ ಮಹಿಳೆಯರು ಬಳಸಿಕೊಳ್ಳಲು ಮುಂದಾಗುತ್ತಿಲ್ಲ. ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಕೊನೆಯಾಗಬೇಕು. ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬೀಜ ಸಂರಕ್ಷಣಾ ತಜ್ಞೆ ಪಾಪಮ್ಮ, ಜಾನಪದ ಕಲಾವಿದೆ ಲಕ್ಷ್ಮೀದೇವಮ್ಮ ಅವರನ್ನು ಸನ್ಮಾನಿಸಲಾಯಿತು. ವಸ್ತು ಪ್ರದರ್ಶನದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮಹಿಳಾ ಸಬಲೀಕರಣ ಶಾಖೆಯ ಸಂಯೋಜಕಿ ಮಂಜುಳಾ ಭೀಮರಾವ್, ಗಲ್‌ಪೇಟೆ ಪಿಎಸ್‌ಐ ವೇದವತಿ, ಯಶಸ್ವಿನಿ ಮಹಿಳಾ ಮಂಡಳಿಯ ಸ್ಥಾಪಕಿ ಕೆ.ಎಸ್.ನಾಗವೇಣಿ, ಮಹಿಳಾ ಸಬಲೀಕರಣ ಶಾಖೆಯ ಸಂಚಾಲಕಿ ಪದ್ಮಾ, ಕಾಲೇಜಿನ ಪ್ರಾಧ್ಯಾಪಕರಾದ ಡಾ.ವಿಜಯ್, ಪ್ರೊ.ವಿಜಯ್‌ಕುಮಾರ್, ಸುನಿಲ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.