ಕೋಲಾರ: ಕೋವಿಡ್ 2ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಮತ್ತು ಕೇಂದ್ರ ಕಚೇರಿ ಸೂಚನೆಯಂತೆ ಶನಿವಾರ (ಏ.24) ಮತ್ತು ಭಾನುವಾರ (ಏ.25) ಜಿಲ್ಲಾ ಕೇಂದ್ರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಉತ್ಪನ್ನಗಳ ವಹಿವಾಟು ನಿಷೇಧಿಸಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಟಿ.ಎಸ್.ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 1 ಮತ್ತು ಮೇ 2ರಂದು ಎಪಿಎಂಸಿ ಪ್ರಾಂಗಣದಲ್ಲಿ ಯಾವುದೇ ರೀತಿಯ ಕೃಷಿ ಉತ್ಪನ್ನಗಳ ವಹಿವಾಟು ನಡೆಯುವುದಿಲ್ಲ. ರೈತರು, ವರ್ತಕರು, ದಲ್ಲಾಳಿಗಳು, ಹಮಾಲರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
50 ಮಂದಿಗೆ ಪ್ರವೇಶ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮದುವೆ ಸಮಾರಂಭಗಳಲ್ಲಿ ಕೇವಲ 50 ಮಂದಿಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಕೋಲಾರ ತಹಶೀಲ್ದಾರ್ ಶೋಭಿತಾ ಹೇಳಿದ್ದಾರೆ.
ಈ ಹಿಂದೆ ತೆರೆದ ಪ್ರದೇಶದಲ್ಲಿನ ಮದುವೆ ಸಮಾರಂಭಕ್ಕೆ 500 ಹಾಗೂ ಸಭಾಂಗಣ, ಹಾಲ್ಗಳು ಸೇರಿದಂತೆ ಮುಚ್ಚಿದ ಪ್ರದೇಶಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಆದೇಶಿಸಲಾಗಿತ್ತು. ಇದೀಗ ಈ ಆದೇಶ ರದ್ದುಪಡಿಸಿ ಸರ್ಕಾರದ ಹೊಸ ಆದೇಶದಂತೆ 50 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದಕ್ಕಿಂತ ಹೆಚ್ಚು ಜನ ಸೇರಿದರೆ ದಂಡ ವಿಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.